ಈ ಬಾರಿ ಸರಳ ದಸರಾ ಆಚರಿಸಲು ಚಿಂತನೆ: ಬಿಎಸ್‍ವೈ

ನಾಡಹಬ್ಬ ದಸರಾ ಮಹೋತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದಲ್ಲಿ ಶುಕ್ರವಾರ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಸರಳ ದಸರಾ ಆಚರಣೆಗೆ ಚಿಂತನೆ ನಡೆಸಿದ್ದು, ಇದನ್ನು ಯಾವ ರೀತಿ ಮಾಡಬೇಕೆಂಬುದನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಈ ಸಂಬಂಧ ಶೀಘ್ರವೇ ದಸರಾ ಉನ್ನತ ಮಟ್ಟದ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಸಂಬಂಧಿಸದಂತೆ ಪ್ರತಿಕ್ರಿಯಿಸಿದ ಅವರು, ಘಟನೆ ಕುರಿತು ಸೂಕ್ತ ತನಿಖೆ ನಡೆಸಲು ಆದೇಶಿಸಲಾಗಿದೆ. ಜತೆಗೆ ಇದನ್ನು ವಿಶೇಷ ಪ್ರಕರಣ ಎಂದು ಭಾವಿಸಿ, 50 ಲಕ್ಷ ರೂ. ಪರಿಹಾರ ನೀಡುವ ಜತೆಗೆ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವ ತೀರ್ಮಾನ ಮಾಡಲಾಗಿದೆ. ಆದರೆ ಪ್ರಕರಣದ ಸತ್ಯಾಂಶದ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಈ ಹಿನ್ನೆಲೆಯಲ್ಲಿ ಕಬಿನಿಯಲ್ಲಿ ಸತತ 5ನೇ ಬಾರಿಗೆ ಬಾಗಿನ ಅರ್ಪಿಸಿದ್ದೇನೆ. ಅಂತರ್ಜಲ ಕುಸಿಯುವುದು ತಪ್ಪಿದ್ದು, ಎಲ್ಲಾ ಕಡೆಗಳಲ್ಲಿ ಉತ್ತಮ ಬೆಳೆ ದೊರೆಯುವ ನಿರೀಕ್ಷೆಯಲ್ಲಿದ್ದೇವೆ. ಪ್ರತಿವರ್ಷ ಇದೇ ರೀತಿಯಾಗಿ ಉತ್ತಮ ಮಳೆಯಾಗಿ ಜನರು ನೆಮ್ಮದಿಯಿಂದ ಬದುಕುವಂತಾಗಲಿ.

Exit mobile version