ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ವಿಜಯಪುರ,ಅ.13:  ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯಿದ್ದು,ರೆಡ್‌ ಅಲರ್ಟ್ ಜಾರಿ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನಿಲ್‌ ಕುಮಾರ ತಿಳಿಸಿದ್ದಾರೆ.

 ಈ ಕುರಿತು ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬಂದಿದ್ದು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಬೀದರ್, ಯಾದಗಿರಿ ಮತ್ತು ರಾಯಚೂರಿನ ಹಲವು ಭಾಗಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

 ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕಾ ಕ್ರಮಗಳನ್ನು  ಕೈಗೊಳ್ಳಲಾಗಿದೆ. ಆಯಾ ಜಿಲ್ಲೆಗಳ ತಹಶೀಲ್ದಾರ್‌ಗಳಿಗೆ ಈ ಕುರಿತು ಪತ್ರದ ಮೂಲಕ ಸೂಚನೆ ನೀಡಲಾಗುತ್ತಿದೆ. ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಸೂಚಿಸಲಾಗಿದೆ.  ಮಾಧ್ಯಮಗಳ ಮೂಲಕ, ವಾಟ್ಸಾಪ್ ಸಂದೇಶಗಳ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗುತ್ತಿದೆ. ಅಷ್ಟೇ ಅಲ್ಲ, ಗ್ರಾಮೀಣ ಭಾಗಗಳಲ್ಲಿ ಡಂಗುರದ ಮೂಲಕವೂ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯಲ್ಲಿ 64 ಮಿ.ಮಿ ಯಿಂದ 204 ಮಿ.ಮಿ ಮಳೆ ಸಾಧ್ಯತೆ ಇದೆ. ಈಗಾಗಲೇ ಪ್ರಕೃತಿ ವಿಕೋಪ ನಿರ್ವಹಣಾ ತಂಡಗಳಿಗೆ ಯಾವುದೇ ವಿಕೋಪ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಸೂಚನೆ ನೀಡಲಾಗಿದೆ. ಪ್ರತಿದಿನ ಮಳೆ ಪ್ರಮಾಣ ಮತ್ತು ಮಳೆಯಿಂದಾದ ಬೆಳೆ ಹಾಗೂ ಆಸ್ತಿಪಾಸ್ತಿ ಹಾನಿಯ ಪ್ರಮಾಣದ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜತೆಗೆ ಬೆಳೆಹಾನಿ ಪ್ರಮಾಣದ ಕುರಿತು ಕೂಡಾ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅವರು ತಿಳಿಸಿದರು.. 

ಈಗಾಗಲೇ ವಿಜಯಪುರ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ವಿಜಯಪುರ ಜಿಲ್ಲೆಯಲ್ಲಿರುವ ನದಿಗಳು ಉಕ್ಕಿ ಹರಿದು ಈರುಳ್ಳಿ, ತೊಗರಿ, ಶೇಂಗಾ, ಮೆಕ್ಕೆಜೋಳ ಸೇರಿದಂತೆ ನಾನಾ ಬೆಳೆಗಳು ಹಾಳಾಗಿವೆ. ಅಷ್ಟೇ ಅಲ್ಲ, ಜಿಲ್ಲೆಯಾದ್ಯಂತ ನೀರು ವ್ಯಾಪಿಸಿ ನೂರಾರು ಮನೆಗಳಿಗೆ ಹಾನಿ ಉಂಟಾಗಿ ಜನರ ಬದುಕು ದುಸ್ತರವಾಗಿದೆ ಎಂದರು.

Exit mobile version