ಕೈ ನಾಯಕರ ವಿರುದ್ಧ ನಿಲ್ಲದ ಎಚ್ಡಿಕೆ ಟ್ವೀಟ್ ಸಮರ

ಕಾಂಗ್ರೆಸ್‍ ನಾಯಕರ ವಿರುದ್ಧ ಟ್ವೀಟ್ ವಾರ್‍ ನಡೆಸುತ್ತಿರುವ ಎಚ್.ಡಿ. ಕುಮಾರಸ್ವಾಮಿ, ಮತ್ತೊಮ್ಮೆ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ಸಿಗರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  
 
“ಕಾಂಗ್ರೆಸ್‍ ಜೊತೆ ಮೈತ್ರಿ ಮಾಡಿಕೊಂಡು ಸಿಎಂ ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ?” ಎಂದು ರಾಜ್ಯ ಕಾಂಗ್ರೆಸ್​​​ ಟ್ವೀಟ್​ ಮಾಡಿದೆ. ನನ್ನನ್ನು ನೇರವಾಗಿ ಪ್ರಶ್ನಿಸಲಾಗದ ಕಾಂಗ್ರೆಸ್​​ನ ಅತಿರಥ ಮಹಾರಥರು ಪಕ್ಷದ ಟ್ವಿಟರ್ ಖಾತೆ ಮೂಲಕ ದಾಳಿ ಮಾಡಿ ಓಡಿ ಹೋಗಿದ್ದಾರೆ. ಆಯ್ತು, ಚರ್ಚೆ ಆರಂಭವಾಗಿದೆ. ಅದನ್ನು ನಾನು ಪೂರ್ತಿಗೊಳಿಸುತ್ತೇನೆ ಎಂದು ಎಚ್​​.ಡಿ ಕುಮಾರಸ್ವಾಮಿ ಸರಣಿ ಟ್ವೀಟ್​​ಗಳನ್ನು ಮಾಡಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಜೆಡಿಎಸ್ ಎದುರು ನಡು ಬಗ್ಗಿಸಿ ನಾವು ಬೇಡವೆಂದರೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಿದಿರಿ. ಆನಂತರ ಒತ್ತಡಗಳನ್ನು ಹೇರಿ ಬ್ಯಾಕ್ ಸೀಟ್ ಡ್ರೈವಿಂಗ್ ಮಾಡಿದಾಗ ಕಾಂಗ್ರೆಸ್​​ನ ನೈತಿಕತೆ ಎಲ್ಲಿತ್ತು? ಎಂದು ಪ್ರಶ್ನಿಸಿದ್ಧಾರೆ

ರೈತರ ಸಾಲ ಮನ್ನಾ ಮಾಡಿ ರಾಜಧರ್ಮ ಪಾಲಿಸಬೇಕಿತ್ತು. ನಿಮ್ಮೆಲ್ಲಾ ಆಟಗಳು ಗೊತ್ತಿದ್ದು ಕೂಡ ರಾಜ್ಯದ ಜನತೆಯ ಹಿತಕ್ಕಾಗಿ ನಾನು ಕೂಡ ಚಾಣಕ್ಯ ನೀತಿಯನ್ನು ಪ್ರದರ್ಶಿಸಿ ರೈತರ ಹಿತ ರಕ್ಷಿಸಿದೆ. ಇದರಲ್ಲಿ ನನ್ನ ವೈಯಕ್ತಿಕ ಲಾಭವೇನಿಲ್ಲ ಎಂದು ಕಾಂಗ್ರೆಸ್​ಗೆ ಎಚ್​ಡಿಕೆ ತಿರುಗೇಟು ನೀಡಿದರು.

ಬೇಡವೆಂದರೂ ನಮ್ಮ ಮನೆ ಬಾಗಿಲಿಗೆ ಬಂದವರು ನೀವು. ನಾನು ಅಮಾಯಕನಾಗಿರಲಿಲ್ಲ. ಕಾಂಗ್ರೆಸ್​​ನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ. ಆದರೆ ನಾಡಿನ ರೈತರ ಹಿತ ಕಾಯಲು ನಾನು ಜಾಣತನ ಪ್ರದರ್ಶಿಸಿದೆ ಎಂಬುದು ನೆನಪಿರಲಿ ಎಂದು ಕುಟುಕಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಕಾಂಗ್ರೆಸ್​​ನ ರಾಷ್ಟ್ರ, ರಾಜ್ಯ ನಾಯಕರು ಇದ್ದ ಸಭೆಯಲ್ಲಿ ದೇವೇಗೌಡರು ಕಾಂಗ್ರೆಸ್​​ಗೆ ಸಲಹೆ ನೀಡಿ ಮಲ್ಲಿಕಾರ್ಜುನ್​​ ಖರ್ಗೆ ಸಿಎಂ ಆಗಲಿ ಎಂದರು. ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು‌ ಎಂದು ಮತ್ತೊಂದು ಟ್ವೀಟ್​​ನಲ್ಲಿ ದಲಿತರ ಬಗೆಗಿನ ಕಾಂಗ್ರೆಸ್​​​ ಕಾಳಜಿ ಬಗ್ಗೆ ಪ್ರಶ್ನಿಸಿದ್ದಾರೆ.

ಅಂತಹ ನಾಯಕರುಗಳು ಯಾರ್ಯಾರೆಂದು ಕಾಂಗ್ರೆಸ್ ಹುಡುಕಿಕೊಳ್ಳಲಿ. ಆಗ ಅವರ ನೈತಿಕತೆ ಪ್ರಶ್ನೆಗೆ ಅವರದೇ ನಾಯಕರಿಂದ ಉತ್ತರ ಸಿಗಬಹುದು ಎಂದಿದ್ಧಾರೆ.

ಎಚ್​​.ಡಿ ಕುಮಾರಸ್ವಾಮಿ ಅಜ್ಞಾತ, ಅಪ್ರಸ್ತುತರಾಗಿದ್ದಾರೆ ಎಂದೂ ಕಾಂಗ್ರೆಸ್​​ನ ನಾಯಕರು ಪಕ್ಷದ ಟ್ವಿಟರ್ ಮೂಲಕ ದಾಳಿ ಮಾಡಿದ್ದಾರೆ. ದೇಶದ ಎಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಸ್ತುತವಾಗಿದೆ? ಪ್ರತ್ಯಕ್ಷವಾಗಿ ರಾಜಕಾರಣ ಮಾಡುತ್ತಿದೆ? ಅನಾಥವಾಗಿದೆ? ಇದಕ್ಕೆ ಉತ್ತರಿಸಲು ನಾಯಕರ್ಯಾರಾದರೂ ಇದ್ದಾರೋ? ಇಲ್ಲ ಕಾಂಗ್ರೆಸ್ನ ಟ್ವಿಟರ್ ಖಾತೆಗೆ ಸೀಮಿತವೋ? ಎಂದು ಗುಡುಗಿದರು.

ಬೇರೆ ಪಕ್ಷದ ಶಾಸಕರಿಗೆ ಸ್ವಯಂ ಸೇರ್ಪಡೆಯ ‘ಮಾರುವೇಶ’ ಹಾಕಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೂ ಬಿಜೆಪಿ ಅವರು ಆಪರೇಷನ್ ಅಸ್ತ್ರ ಬಳಸಿ ಸರ್ಕಾರವೊಂದನ್ನು ಬುಡಮೇಲು ಮಾಡುವುದಕ್ಕೂ ಅಂತಹ ವ್ಯತ್ಯಾಸವೇನಿಲ್ಲ. ಒಂದು ತೆಳುಗೆರೆಯಷ್ಟೇ ಅಂತರ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಇದರ ಅರ್ಥ ತಿಳಿಯದಷ್ಟು ಕುಬ್ಜ ಸ್ಥಿತಿ ತಲುಪಿರುವುದು ಚೋದ್ಯವೆನಿಸಿದೆ. ಟೀಕೆಗಾಗಿ ಟೀಕೆ ಮಾಡುವ ಇಂತಹ ಮನಸ್ಥಿತಿಯಿಂದಾಗಿಯೇ ಕಾಂಗ್ರೆಸ್ ಇಂದು ಇಂತಹ ದುಃಸ್ಥಿತಿಗೆ ತಲುಪಿದೆ. ಕಪಟ ರಾಜಕಾರಣವನ್ನು ಯಾವ ಬಾಗಿಲಿನಿಂದ ಮಾಡಿದರೂ ಅದು ಅನೀತಿಯೇ ಆಗಿದೆ ಎಂದರು.

Exit mobile version