ಮೈಸೂರು, ಅ. 28: ಮೈಸೂರು ದಸರಾ ಮುಗಿಯುತ್ತಿದ್ದಂತೆಯೇ ಮೈಸೂರಿಗರನ್ನು ಕಣ್ಮನ ಸೆಳೆಯುವ ಹಬ್ಬವೆಂದರೆ ಚಾಮುಂಡಿ ಬೆಟ್ಟದಲ್ಲಿ ನಡೆಯುವ ರಥೋತ್ಸವ. ಆದರೆ ಈ ವರ್ಷ ಈ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರಿಗೆ ನಿರ್ಬಂಧವನ್ನು ಹೇರಲಾಗಿದೆ. ಆದ್ದರಿಂದ ಇಂದು ಸಂಜೆ 6 ರಿಂದ ನಾಳ ಮಧ್ಯಾಹ್ನ ೧೨ ಗಂಟೆಯವರೆಗೆ ಸಾರ್ವಜನಿಕರಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ.
29ರಂದು ಬೆಳಗ್ಗೆ 9.45ರಿಂದ 10.5ರವರೆಗೆ ಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವ ನಡೆಯಲಿದ್ದು, ರಥೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿಸಿದರು.
ಈ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಿದ ಕೋವಿಡ್ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಮತ್ತು ತುರ್ತು ಸೇವಾ ವಾಹನಗಳು, ಗ್ರಾಮಸ್ಥರ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕರ ವಾಹನ ಮತ್ತು ಖಾಸಗಿ ವಾಹನಗಳು ಬೆಟ್ಟಕ್ಕೆ ಬರುವುದನ್ನು ನಿಷೇಧಿಸಲಾಗಿದೆ. ಇದರ ಜತೆಗೆ ಈ ಎರಡೂ ದಿನಗಳಲ್ಲಿಯೂ ದೇವಾಲಯದ ಪ್ರದೇಶದಲ್ಲಿ ಹಾಗೂ ದೇವಾಲಯದ ವತಿಯಿಂದ ಹಾಗೂ ದಾನಿಗಳಿಂದ ಸಾಮೂಹಿಕವಾಗಿ ಹಾಗೂ ಸಾರ್ವಜನಿಕವಾಗಿ ಪ್ರಸಾದ ತಯಾರಿಸುವುದು ಮತ್ತು ವಿತರಿಸುವುದನ್ನು ನಿಷೇಧಿಸಲಾಗಿದೆ.
ಚಾಮುಂಡಿ ಬೆಟ್ಟದಲ್ಲಿ ನಡೆಯುವ ರಥೋತ್ಸವ ಸಂಬಂಧಿತ ಧಾರ್ಮಿಕ ಕಾರ್ಯಕ್ರಮಗಳು ಸಾಂಪ್ರದಾಯಿಕವಾಗಿ ನಡೆಯುವ ಪೂಜಾ ವಿಧಿಗಳನ್ನು ಯಾವುದೇ ಅಡೆತಡೆಯಿಲ್ಲದೇ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಯ ಉಪಸ್ಥಿತಿಯಲ್ಲಿ ಎಂದಿನಂತೆ ನಡೆಸಬಹುದು ಎಂದು ಜಿಲ್ಲಾಧಿಕಾರಿಯ ಆದೇಶದಲ್ಲಿ ಉಲ್ಲೇಖಿಸಲಾಗಿದೆ.