ಬೆಂಗಳೂರು, ಜ. 11: ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಚರ್ಚೆಗಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಇಂದು (ಭಾನುವಾರ) ಬೆಳಗ್ಗೆ ದೆಹಲಿ ತಲುಪಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮೊದಲು ಬಿಎಸ್ವೈ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂಕ್ರಾಂತಿ ಹಬ್ಬದ ಒಳಗಾಗಿ ಸಂಪುಟ ವಿಸ್ತರಣೆ ಮಾಡುವ ಸಂಬಂಧ ಚರ್ಚಿಸುವ ಸಾಧ್ಯತೆ ಇದೆ. ಅಷ್ಟೇ ಅಲ್ಲ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿನ ಬಗ್ಗೆಯೂ ವರಿಷ್ಠರೊಂದಿಗೆ ಮಾತನಾಡಲಿದ್ದಾರೆ ಎನ್ನಲಾಗಿದೆ.
ತಮ್ಮ ದೆಹಲಿ ಭೇಟಿ ಕುರಿತು ಮಾತನಾಡಿರುವ ಸಿಎಂ, ರಾಜ್ಯದ ರಾಜಕೀಯ ಪರಿಸ್ಥಿತಿ ಹಾಗೂ ಇತ್ತೀಚಿನ ಗ್ರಾಮ ಪಂಚಾಯತಿ ಚುನಾವಣಾ ಫಲಿತಾಂಶದ ಕುರಿತು ಅಮಿತ್ ಶಾ ಅವರೊಂದಿಗೆ ಮಾತನಾಡಲಿದ್ದೇನೆ. ಅಲ್ಲದೇ ಸಾಧ್ಯವಾದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಸಹ ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.