ಮೈಸೂರು, ಅ. 24: ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಚಿತ್ರರಂಗದ ತಾರೆಯರು ಎಂದು ಹೇಳಿಕೊಂಡು ಅನಧಿಕೃತವಾಗಿ ಆನೆ ಶಿಬಿರ ಪ್ರವೇಶಿಸಿದ್ದ ಆರೋಪದಡಿ ಚಿತ್ರನಟ ಧನ್ವೀರ್ ಸೇರಿ 6 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಧನ್ವೀರ್ ಜೊತೆಗೆ ವಿಶ್ವಾಸ್ ಅಯ್ಯರ್, ದರ್ಶನ್ ಸೇರಿದಂತೆ ಇನ್ನೂ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಇವರು ಅ.23 ರಂದು ಆನೆಚೌಕೂರು ವನ್ಯಜೀವಿ ವಲಯದ ಮತ್ತಿಗೋಡು ಆನೆ ಶಿಬಿರಕ್ಕೆ ಅನಧಿಕೃತ ಪ್ರವೇಶ ಪಡೆದು ಮಹೇಂದ್ರ ಎಂಬ ಸಾಕಾನೆ ಮೇಲೆ ಸವಾರಿ ಮಾಡಿದ್ದಾರೆ. ಅಲ್ಲದೇ, ಅದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಮಾಹಿತಿ ಆಧರಿಸಿ ಅವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರಡಿ ಅರಣ್ಯ ಮೊಕದ್ದಮೆಯನ್ನು ದಾಖಲಿಸಲಾಗಿದೆ.
ಪ್ರಕರಣದಲ್ಲಿ ಮತ್ತಿಗೋಡು ಆನೆ ಶಿಬಿರದ ಉಸ್ತುವಾರಿ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಸಿಬ್ಬಂದಿ ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.