ಬಿಎಸ್‌ವೈ ಹಾಗೂ ಮೋದಿ ಅವರೇನು ಎಳೆ ಕಡಸುಗಳಾ? ಸಿದ್ದರಾಮಯ್ಯ ಟಾಂಗ್

ಬೆಂಗಳೂರು, ಅ. 28: ”ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ. ಹಾಗಾದರೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ?” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಉಪಚುನಾವಣೆ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ವಾಹನಕ್ಕೆ ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸರಣಿ ಟ್ವೀಟ್ ಮಾಡಿರುವ ಅವರು, ”ನಿನ್ನೆ ನಾನು ಯಶವಂತಪುರ ಸಮೀಪ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಭಾಷಣಕ್ಕೆ ಅಡ್ಡಿಪಡಿಸಿದ್ದರಲ್ಲದೆ, ನಾನು ವಾಪಾಸು ತೆರಳುವಾಗ ವಾಹನ ಅಡ್ಡಗಟ್ಟಿ ಬೆದರಿಸುವ ಪ್ರಯತ್ನ ಮಾಡಿದ್ದರು. ಇದು ಬಿಜೆಪಿಯವರ ರಾಜಕಾರಣದ ಇನ್ನೊಂದು ಮುಖವನ್ನು ಅನಾವರಣಗೊಳಿಸಿದೆ” ಎಂದು ದೂರಿದ್ದಾರೆ.

ಆರ್.ಆರ್ ನಗರದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದ ಮುನಿರತ್ನ ಅವರೆ ಅಲ್ಲಿನ ಕಾನೂನು ಬಾಹಿರ ಚಟುವಟಿಕೆಗಳಿಗೆ, ಗೂಂಡಾಗಿರಿಗೆ ಮೂಲ ಕಾರಣ. ಸೋಲಿನ ಭಯದಿಂದ ಜಿ.ಕೆ ವೆಂಕಟೇಶ್ ಅಂಥವರನ್ನು ಮುಂದೆ ಬಿಟ್ಟು ಮುನಿರತ್ನ ಅವರೆ ಗಲಭೆ ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಅನುಮಾನವಿದೆ” ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

‘ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ, ಹಾಗಾದರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ?” ಎಂದು ಪ್ರಶ್ನಿಸಿದ್ದಾರೆ. ಚುನಾವಣೆಯನ್ನು ಸಾಧನೆ ಮತ್ತು ಸಿದ್ಧಾಂತದ ಮೂಲಕ ಎದುರಿಸಲಾಗದವರು ಮಾತ್ರ ಸೋಲಿನ ಭೀತಿಯಿಂದ ಈ ರೀತಿ ಚಾರಿತ್ರ್ಯಹರಣ, ಗೂಂಡಾಗಿರಿ, ಹಣ ಹಂಚುವುದು ಮೊದಲಾದ ಅಡ್ಡದಾರಿ ಹಿಡಿಯುವುದು” ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

Exit mobile version