ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜತೆಗೆ ಸಂಪರ್ಕದಲ್ಲಿದ್ದ ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳು ಕ್ವಾರಂಟೈನ್ ಆಗಿದ್ದಾರೆ.
ಸಿಎಂ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹಿನ್ನೆಲೆಯಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಸೆಲ್ಫ್ ಕ್ವಾರಂಟೈನ್ ಆಗಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಕ್ವಾರಂಟೈನ್ ಆಗಿರುವ ಗೃಹ ಸಚಿವರು, ಇಂದು ಕೋವಿಡ್-19 ಪರೀಕ್ಷೆಗೆ ಒಳಪಡಲಿದ್ದಾರೆ. ಈ ಹಿಂದೆಯೂ ಒಮ್ಮೆ ಕ್ವಾರಂಟೈನ್ ಆಗಿದ್ದ ಬಸವರಾಜ ಬೊಮ್ಮಾಯಿ, ಇದೀಗ ಎರಡನೇ ಬಾರಿಗೆ ಕ್ವಾರಂಟೈನ್ ಗೆ ಒಳಪಡುತ್ತಿದ್ದಾರೆ.
ಎರಡು ದಿನಗಳ ಹಿಂದೆ ಸಿಎಂ ಅವರನ್ನು ಭೇಟಿ ಮಾಡಿದ್ದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಪೈಕಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸೆಲ್ಫ್ ಕ್ವಾರಂಟೈನ್ ಆಗಿದ್ದಾರೆ. ಸಿಎಂ ಭೇಟಿ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ರಾಜ್ಯ ಉಪಾಧ್ಯಕ್ಷರಾದ ಅರವಿಂದ ಲಿಂಬಾವಳಿ, ಬಿ.ವೈ. ವಿಜಯೇಂದ್ರ, ರಾಜ್ಯ ಕಾರ್ಯದರ್ಶಿ ಸತೀಶ್ ರೆಡ್ಡಿ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಸಂದೀಪ್ ಸಹ ಜೊತೆಗಿದ್ದರು.
ಇನ್ನೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೂ ಕೊರೊನಾ ಆತಂಕ ಶುರುವಾಗಿದೆ. ಜುಲೈ 31ರಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ ಕಮಲ್ ಪಂತ್, ಆ.1 ರಂದು ಸಹ ಸಿಎಂ ಭೇಟಿಯಾಗಿ, ಕೆಲಕಾಲ ಮಾತುಕತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್, ಸೆಲ್ಫ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ತಮ್ಮ ಮನೆಯಲ್ಲೇ ಸೆಲ್ಫ್ ಕ್ವಾರಂಟೈನ್ ಆಗಿರುವ ಪೊಲೀಸ್ ಆಯುಕ್ತರು, ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಸುವುದು ಹಾಗೂ ಇನ್ನಿತರ ಕೆಲಸ ಕಾರ್ಯ ನಿರ್ವಹಿಸುತ್ತಿದ್ದಾರೆ.
ಈ ನಡುವೆ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಿಎಂ ಗೃಹಕಚೇರಿ ಕೃಷ್ಣಾದಿಂದ ಎರಡು ಆಂಬ್ಯುಲೆನ್ಸ್ ಗಳಲ್ಲಿ, ಕೊರೊನಾ ಪಾಸಿಟಿವ್ ಬಂದಿರುವ ಸಿಬ್ಬಂದಿಯನ್ನು ಬಿಐಇಸಿ ಕೋವಿಡ್ ಕೇರ್ಗೆ ಶಿಫ್ಟ್ ಮಾಡಲಾಗಿದೆ. ಪ್ರಮುಖವಾಗಿ ಸಿಎಂ ಗೃಹ ಕಚೇರಿಯಲ್ಲಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ, ಹೌಸ್ಕಿಪಿಂಗ್ ಮಹಿಳಾ ಸಿಬ್ಬಂದಿ ಸೇರಿ ಮೂವರನ್ನು ಕೋವಿಡ್ ಕೇರ್ ಸೆಂಟರ್ಗೆ ಶಿಫ್ಟ್ ಮಾಡಲಾಗಿದೆ.
ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಈಗಾಗಲೇ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರೆಸುವ ಸಾಧ್ಯತೆ ಇದೆ. ಯಡಿಯೂರಪ್ಪ ಅವರಿಗೆ ವಯೋಸಹಜವಾಗಿ ಬಿಪಿ ಹಾಗೂ ಷುಗರ್ ಸಮಸ್ಯೆಗಳಿತ್ತು. ಹೀಗಾಗಿ ಪ್ರತಿ ವಾರ ಆರೋಗ್ಯ ತಪಾಸಣೆಗೆ ಒಳಗಾಗುತ್ತಿದ್ದರು. ಸದ್ಯ ಷುಗರ್ ಹಾಗೂ ಬಿಪಿ ಕಂಟ್ರೋಲ್ನಲ್ಲಿದ್ದರೂ, ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲು ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.