ಮತ್ತೆ ಮರಣ ಮೃದಂಗ ಬಾರಿಸಿದ ಮಹಾಮಾರಿ ಕೊರೊನಾ

ಬೆಂಗಳೂರು: ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಮಹಾಮಾರಿ ಕೊರೊನಾ ರಾಜ್ಯದಲ್ಲಿ ಬುಧವಾರ ಮರಣ ಮೃದಂಗ ಬಾರಿಸಿದೆ. ರಾಜ್ಯದಲ್ಲಿ ಈಗಾಗಲೇ ತಲ್ಲಣ ಸೃಷ್ಟಿಸಿರುವ ಕೊರೊನಾ ಸೋಂಕಿಗೆ ಇಂದು ಒಂದೇ ದಿನ ಬರೋಬ್ಬರಿ 87 ಮಂದಿ ಜನರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 929ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಸ್‍ನಿಂದಾಗಿ ಕಳೆದ 24 ಗಂಟೆಗಳಲ್ಲಿ ರಾಜ್ಯ ರಾಜಧಾನಿಯಲ್ಲಿ 60 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 87 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1975 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 3176 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 47,253ಕ್ಕೆ ಏರಿಕೆಯಾಗಿದೆ.ಇನ್ನೂ ಕಳೆದ 24 ಗಂಟೆಗಳಲ್ಲಿ 1076 ಮಂದಿ ಗುಣಮುಖರಾಗಿದ್ದು, 18466 ಜನರು ಸೋಂಕಿನಿಂದ ಚೇತರಿಕೆ ಕಂಡಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

Exit mobile version