ಮೈಸೂರು, ಅ.17: ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿ ಹೋಗಿದ್ದು, ಮನೆ ಕಳೆದುಕೊಂಡ ಜನರಿಗೆ ತಕ್ಷಣಕ್ಕೆ 10 ಸಾವಿರ ರೂಪಾಯಿ ಪರಿಹಾರ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.
ಸಿಎಂ ಯಡಿಯೂರಪ್ಪನವರು ನಾಡ ಹಬ್ಬ ದಸರಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ಪರಿಹಾರ, ನೆರವು ಪಡೆಯುವ ಬಗ್ಗೆ ಪ್ರಧಾನಿ ಮತ್ತು ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದರು.
ಈಗಾಗಲೇ ನೆರೆ ಬಾಧಿತ 12 ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆಯಲಾಗಿದ್ದು, 10 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ವಾರದೊಳಗೆ ಅಂದಾಜು ನಷ್ಟದ ವರದಿ ಸಲ್ಲಿಸುವಂತೆ ಡಿಸಿಗಳಿಗೆ ಸೂಚಿಸಿದ್ದೇನೆ ಎಂದರು. ಅನುದಾನದ ಕೊರತೆ ಇಲ್ಲ, ಎನ್ಡಿಆರ್ಎಫ್ ನಿಧಿಯಲ್ಲಿ ಹಾನಿಯಾದವರಿಗೆ, ಮನೆ ಕಳೆದುಕೊಂಡವರಿಗೆ ಐದು ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ತಿಳಿಸಿದರು.
ಕಳೆದ ರಾತ್ರಿ ಪ್ರಧಾನಿ ಮೋದಿ ಅವರು ತಮ್ಮೊಂದಿಗೆ ಮಾತುಕತೆ ನಡೆಸಿದ್ದು, ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದಾರೆ. ಸನ್ನಿವೇಶವನ್ನು ನಿರ್ವಹಿಸಲು ಎಲ್ಲಾ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದರು.
ಕಳೆದ ಮೂರು ತಿಂಗಳಲ್ಲಿ ಈ ಪ್ರದೇಶದಲ್ಲಿ ಮೂರನೇ ಬಾರಿಗೆ ಪ್ರವಾಹ ಉಂಟಾಗಿರುವುದರಿಂದ ಉತ್ತರ ಕರ್ನಾಟಕವು ಶೋಚನೀಯ ಸ್ಥಿತಿ ತಲುಪಿದೆ. ಧಾರಾಕಾರ ಮಳೆ ಮತ್ತು ರಾಜ್ಯದ ಪ್ರಮುಖ ಅಣೆಕಟ್ಟುಗಳಿಂದ ನೀರನ್ನು ಬಿಡುಗಡೆ ಮಾಡುವುದರಿಂದ ಕರ್ನಾಟಕದ ಅನೇಕ ಭಾಗಗಳಲ್ಲಿನ ಪ್ರವಾಹ ಪರಿಸ್ಥಿತಿ ಆತಂಕಕಾರಿಯಾಗಿದೆ.