ಬೆಂಗಳೂರು, ಅ.14: ರಾಜ್ಯದಲ್ಲಿ ಒಂದು ವಾರದಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯು ಇನ್ನು ನಾಲ್ಕು ದಿನ ಮುಂದುವರೆಯುವ ಸಾಧ್ಯತೆಗಳಿವೆ. ನಿನ್ನೆ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರಂತರ ಭಾರೀ ಮಳೆಯಾದ ವರದಿಯಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಬೀದರ್, ಗುಲ್ಭರ್ಗ ಭಾಗದಲ್ಲಿ ಅಧಿಕ ಪ್ರಮಾಣದ ಮಳೆಯಾದ ವರದಿಯಾಗಿದೆಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ. ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.
ಹಿಂಗಾರು ಮಳೆಯ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಉತ್ತಮ ಪ್ರಮಾಣದ ಮಳೆಯಾಗುತ್ತಿದೆ. ಕೆಲವೆಡೆ ಅಧಿಕ ಮಳೆಯಾದರೆ, ಇನ್ನೂ ಕೆಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ನಿನ್ನೆ ತೀವ್ರ ಸ್ವರೂಪ ಪಡೆದುಕೊಂಡಿದದ್ದು, ಇದರಿಂದ ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಿದೆ.
ವಾಯುಭಾರ ಕುಸಿತ ಇಂದು ದುರ್ಬಲಗೊಂಡಿದೆಯಾದರೂ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದರು. ರಾಜ್ಯದ ಉತ್ತರ ಒಳನಾಡಿನಲ್ಲಿ ಹೆಚ್ಚಿನ ಪ್ರಮಾಣದ ಮಳೆ ಮುಂದುವರೆಯಲಿದೆ. ಆದರೆ, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಅಲ್ಲದೇ, ಅ.16ರಂದು ಬಂಗಾಳಕೊಲ್ಲಿಯಲ್ಲಿ ಮತ್ತೊಮ್ಮೆ ವಾಯುಭಾರ ಕುಸಿತ ಉಂಟಾಗುವ ಸಂಭವವಿದೆ. ಆದ್ದರಿಂದ ಆ ಸಂದರ್ಭದಲ್ಲಿ ಮತ್ತೊಂದು ರಾಜ್ಯದಲ್ಲಿ ಸುತ್ತಿನ ಮಳೆಯಾಗಲಿದೆ. ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ಇನ್ನೂ ನಾಲ್ಕುದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ ಸೂಚಿಸಿದೆ.
ಈಗಾಗಲೇ ಸತತವಾಗಿ ಸುರಿದ ಅಧಿಕ ಮಳೆಯಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ಹಂಗಾಮಿನ ಬೆಳೆ ಹಾನಿಗೀಡಾಗಿದೆ. ಕೊಯ್ಲಿಗೆ ಬಂದಿದ್ದ ಫಸಲಿಗೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ತೊಂದರೆ ಉಂಟಾಗಲಿದೆ ಎಂದು ಹೇಳಿದರು.