ಮೈಸೂರು, ಅ.19: ಕಾಲೇಜುಗಳನ್ನು ತೆರೆಯುವ ಬಗ್ಗೆ ಕೇಂದ್ರ ಸರ್ಕಾರ ಮತ್ತು ಯುಜಿಸಿಯಿಂದ ಈಗಾಗಲೇ ರಾಜ್ಯಕ್ಕೆ ಮಾರ್ಗಸೂಚಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಮೂಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಶೀಘ್ರದಲ್ಲಿ ಕಾಲೇಜುಗಳನ್ನು ತೆರೆಯುವ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಡಿಸಿಎಂ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.
ಮೈಸೂರು ವಿ.ವಿ. 100ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್ ಸಂಕಷ್ಟ ಕಾಲದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವುದಕ್ಕೂ ಸಿನಿಮಾ ಟಾಕೀಸ್ಗಳನ್ನು ತೆರೆಯುವುದಕ್ಕೂ ಪರಸ್ಪರ ಹೋಲಿಸುವುದು ಸರಿಯಲ್ಲ. ಪದವಿ ಕಾಲೇಜುಗಳ ಬಗ್ಗೆ ಹೇಳುವುದಾದರೆ, ತರಗತಿ ನಡೆಯುವ ಕೋಣೆಗಳನ್ನು ನಿರಂತರವಾಗಿ ಸ್ಯಾನಿಟೈಸ್ ಮಾಡುತ್ತಿರಬೇಕು. ವಿದ್ಯಾರ್ಥಿಗಳ ಥರ್ಮಲ್ ಸ್ಕ್ರೀನಿಂಗ್ ಮಾಡುತ್ತಲೇ ಇರಬೇಕು. ಪ್ರತಿಕ್ಷಣವೂ ಎಚ್ಚರ ತಪ್ಪುವಂತಿಲ್ಲ. ವಿದ್ಯಾರ್ಥಿಗಳು ಮತ್ತು ಬೋಧಕರು, ಸಿಬ್ಬಂದಿಯ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸುಲಭವಲ್ಲ. ಮುಖ್ಯವಾಗಿ ವೈರಸ್ ನಮ್ಮ ನಡುವೆಯೇ ಜೀವಂತವಾಗಿ ಓಡಾಡಿಕೊಂಡಿದೆ. ಹೀಗಾಗಿ ಪರಿಸ್ಥಿತಿ ನೋಡಿಕೊಂಡು ಕಾಲೇಜು ಆರಂಭಿಸುತ್ತೇವೆ. ಈ ವಿಷಯದಲ್ಲಿ ಆತುರ ಸಲ್ಲ ಎಂದು ತಿಳಿಸಿದರು.
ಈಗಾಗಲೇ ಎಲ್ಲ ಕಾಲೇಜುಗಳಲ್ಲಿ ಆನ್ಲೈನ್ ತರಗತಿಗಳು ಉತ್ತಮವಾಗಿ ನಡೆಯುತ್ತಿವೆ. ಡಿಜಿಟಲ್ ಕಲಿಕೆ ಮತ್ತು ಬೋಧನೆ ನಿರೀಕ್ಷೆಗೂ ಮೀರಿ ಉತ್ತಮವಾಗಿ ನಡೆಯುತ್ತಿದೆ. ವಿದ್ಯಾರ್ಥಿಗಳು ಇದೇ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ತಯಾರಿ ಮಾಡಿಕೊಳ್ಳಬೇಕು ಎಂದ ಅವರು, ಈಗಾಗಲೇ ಯುಜಿಸಿಯಿಂದ ಕಾಲೇಜು ಆರಂಭಕ್ಕೆ ಸೂಕ್ತ ಮಾಹಿತಿ, ಮಾರ್ಗಸೂಚಿ ಬಂದಿದೆ. ಅದರನ್ವಯ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಶೀಘ್ರವೇ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಕಾಲೇಜು ಆರಂಭದ ದಿನವನ್ನು ಪ್ರಕಟಿಸಲಾಗುವುದು ಎಂದರು.