ಯಾವುದೇ ಕಾರಣಕ್ಕೂ ಸೆಪ್ಟೆಂಬರ್ನಿಂದ ಶಾಲೆಗಳನ್ನು ಪ್ರಾರಂಭಿಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಎದುರಾಗಿರುವ ಕೊರೊನಾ ಭೀತಿ ನಡುವೆಯೇ ಸೆಪ್ಟೆಂಬರ್ನಿಂದ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂಬ ಬಗ್ಗೆ ಊಹಾಪೋಹಗಳು ಹರಿದಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಸುರೇಶ್ ಕುಮಾರ್ ಅವರೇ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷವನ್ನು ಯಾವ ರೀತಿ ಆರಂಭಿಸಬೇಕೆಂಬ ಸವಾಲು ನಮ್ಮ ಮುಂದಿದೆ. ಹೀಗಿರುವಾಗಿ ಶಾಲೆ ಪ್ರಾರಂಭಕ್ಕೆ ಸುರೇಶ್ ಕುಮಾರ್ ತುದಿಗಾಲಿನಲ್ಲಿ ನಿಂತಿದ್ದಾರೆ ಎಂಬ ಬಿರುದನ್ನು ನನಗೆ ನೀಡಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಸೆಪ್ಟೆಂಬರ್ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ ಎಂದರು.
ನಮ್ಮ ಮಕ್ಕಳ ಆರೋಗ್ಯ ಅತ್ಯಂತ ಮುಖ್ಯವಾಗಿದ್ದು, ಅವರುಗಳ ಸುರಕ್ಷತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಜೊತೆಗೆ ಮಕ್ಕಳ ಕಲಿಕೆ ಹೇಗೆ? ಯಾವ ರೀತಿ ಕಲಿಕೆ ಮುಂದುವರಿಸಬಹುದು ಎಂಬ ಬಗ್ಗೆ ಈಗಾಗಲೇ ವಿದ್ಯಾಗಮನ ಎಂಬ ಯೋಜನೆ ತರಲಾಗಿದೆ. ಈ ವಿದ್ಯಾಗಮನ ಯೋಜನೆಯನ್ನು ಇಡೀ ರಾಷ್ಟ್ರವೇ ನೋಡುವಂತ ಅತ್ಯುತ್ತಮ ಯೋಜನೆಯಾಗಿದೆ ಎಂದು ಹೇಳಿದರು.
ಹಲವು ಕಡೆಗಳಲ್ಲಿ ಶಿಕ್ಷಕರು ಮಕ್ಕಳ ಕಲಿಕೆಗೆ ಪ್ರೋತ್ಸಾಹ ಕೊಟ್ಟು ಕಲಿಸುತ್ತಿದ್ದಾರೆ. ಶಿಕ್ಷಕರು ಊರಿನ ಪಡಶಾಲೆಯಲ್ಲಿ ಮಕ್ಕಳಿಗೆ ಮಾಡುತ್ತಿದ್ದಾರೆ. ಕೊರೊನಾ ಕಾಲದಲ್ಲಿ ಕೂಡ ನಮ್ಮ ಮಕ್ಕಳು ಯಾವುದೇ ಖಿನ್ನತೆಗೆ ಒಳಗಾಗಬಾರದು. ಅದಕ್ಕಾಗಿ ಅವರಿಗೆ ಕಲಿಕೆ ಮುಂದುವರಿಸಬೇಕು. ಈಗಾಗಲೇ ಎಲ್ಲರ ಮನೆಗೆ ಪಠ್ಯ ಪುಸ್ತಕ ತಲುಪಿಸಿದ್ದು, ಟಿವಿಯಲ್ಲಿ ಸೇತುಬಂಧ ಕಾರ್ಯಕ್ರಮ ಮಾಡುತ್ತಿದ್ದೇವೆ. ಶಿಕ್ಷಣ ಇಲಾಖೆಯಿಂದ ಎರಡು ಚಾನಲ್ಗಳನ್ನು ಪ್ರಾರಂಭಿಸುತ್ತಿದ್ದೇವೆ. ಎಲ್ಲಾ ತರಗತಿಗಳಿಗೆ ಪಾಠ ಮಾಡಲು ಸಿದ್ದತೆ ನಡೆದಿದೆ, ಪಠ್ಯಕ್ರಮ ಕೂಡ ಸಿದ್ಧವಾಗಿದೆ. ಸಮಾಜಕ್ಕೆ ಭರವಸೆ ಕೊಡುವ ಕಾರ್ಯವನ್ನ ಶಿಕ್ಷಣ ಇಲಾಖೆ ಮಾಡುತ್ತಿದೆ ಎಂದರು.