ಮೈಸೂರು, ಡಿ. 12: ದಿನದಿಂದ ದಿನಕ್ಕೆ ಹೆಚ್ಚಿನ ಪ್ರಯಾಣಿಕರನ್ನು ಸೆಳೆಯುತ್ತಿರುವ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣವು ಶೀಘ್ರದಲ್ಲಿಯೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಮೈಸೂರಿನ ಕಡಕೊಳದಲ್ಲಿ ಮಲ್ಟಿ ಮಾಡೆಲ್ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣದ ಶಂಕುಸ್ಥಾಪನೆ ಕುರಿತಂತೆ ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಳೆದ ಐದು ವರ್ಷದ ಅವಧಿಯಲ್ಲಿ 8 ಟ್ರೈನ್ಗಳನ್ನು ಮೈಸೂರಿಗೆ ತರಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಅವಧಿಯಲ್ಲಿ ಯಾವಾಗ ಬೇಕಾದರೂ ಅಗತ್ಯವಿರುವ ಕಡೆ ರೈಲು ಸಂಚಾರ ವ್ಯವಸ್ಥೆ ಮಾಡಬಹುದು. ಇದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ ಎಂದರು.
ಮೈಸೂರು-ಬೆಂಗಳೂರು ನಡುವೆ 10 ಪಥದ ರಾಷ್ಟೀಯ ಹೆದ್ದಾರಿ ನಿರ್ಮಾಣವಾಗುತ್ತಿದೆ. ಈ ಮೂಲಕ ಕೈಗಾರಿಕಾ ಅಭಿವೃದ್ಧಿ ಮೂಲಕ ಮೈಸೂರಿನಲ್ಲಿ ಹೆಚ್ಚಿನ ಉದ್ಯೋಗವಕಾಶಗಳು ದೊರೆಯುತ್ತಿದೆ. ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗದೆ ಮೈಸೂರಿನಲ್ಲೇ ಉದ್ಯೋಗ ಸಿಗುವಂತಾಗುತ್ತದೆ. ಜತೆಗೆ ಕಡಕೊಳದಲ್ಲಿ ಮಲ್ಟಿ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಈಗಲೇ ಶಂಕುಸ್ಥಾಪನೆ ನೆರವೇರಬೇಕಿತ್ತು. ಆದರೆ ಗ್ರಾಮ ಪಂಚಾಯಿತಿ ಚುನಾವಣೆಯ ನೀತಿ ಸಂಹಿತೆ ಕಾರಣ ಶಂಕು ಸ್ಥಾಪನೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.