ಕಲ್ಬುರ್ಗಿ ಜ 4 : ಕಲ್ಯಾಣ ಕರ್ನಾಟಕ ಅಭಿವೃದ್ದಿ ದೃಷ್ಠಿಯಿಂದ ಸಾಕಷ್ಟು ಸೌಲಭ್ಯಗಳನ್ನು ಒದಗಿಸಲಾಗಿದ್ದು ಇದರ ಜೊತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ 5000 ಹುದ್ದೆಗಳೂ ಸೇರಿದಂತೆ ವಿವಿಧ ಇಲಾಖೆಗಳಿಗೆ ಒಟ್ಟು 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು.
ಕೆಕೆಆರ್ ಡಿಬಿ ಬೋರ್ಡ್ ರಚನೆಯಾಗದಿರುವ ಬಗ್ಗೆ ಪ್ರತಿಕ್ರಿಯಿಸಿ ಈ ವಾರದಲ್ಲಿ ಕೆಕೆಆರ್ ಡಿ ಬಿಗೆ ಪೂರ್ಣ ಪ್ರಮಾಣದ ಅಧಿಕಾರಿಗಳನ್ನು ನೀಡಲಾಗುವುದು. ಇನ್ನೆರಡು ದಿನಗಳಲ್ಲಿ ಕೆಕೆಆರ್ ಡಿಬಿ ಮಂಡಳಿಯ ರಚನೆ ಆಗಲಿದೆ. ಮಂಡಳಿಗೆ 3000 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಇಂದು ಸಂಜೆ ಟಾಸ್ಕ್ ಫೋರ್ಸ್, ತಜ್ಞರ ಸಮಿತಿ ಸಮ್ಮುಖದಲ್ಲಿ ಕೋವಿಡ್ ಬಗ್ಗೆ ಸಭೆ ಜರುಗಲಿದೆ. ವಿಶ್ವದಲ್ಲಿ ಪುನ: ಕರೋನಾ ಹೆಚ್ಚಳವಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಭಾರತ ಸರ್ಕಾರ ಎಚ್ಚರಿಕೆ ನೀಡಿ, ಹಲವಾರು ಮಾರ್ಗದರ್ಶನವನ್ನು ನೀಡಿದೆ. ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ಪರಿಣಾಮ ಕರ್ನಾಟಕದ ಮೇಲೆಯೂ ಆಗುತ್ತದೆ. ಗಡಿಗಳಲ್ಲಿ ಕಠಿಣ ಕ್ರಮಗಳನ್ನು ಜಾರಿ ಮಾಡಲಾಗಿದೆ. ಎರಡು ಡೋಸು ಹಾಗೂ ಆರ್ ಟಿ ಪಿಸಿಆರ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ಕೋವಿಡ್ ಹಾಗೂ ಒಮಿಕ್ರಾನ್ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಕೋವಿಡ್ ನಿಯಂತ್ರಣಕ್ಕೆ ಬರುವ ದಿನಗಳಲ್ಲಿ ದೀರ್ಘಾವಧಿಯ ಯೋಜನೆಯನ್ನು ರೂಪಿಸಬೇಕಾಗಿದೆ ಎಂದು ತಿಳಿಸಿದರು.
ಕೋವಿಡ್ ನ 1 ಹಾಗೂ 2 ನೇ ಅಲೆ ನಿರ್ವಹಣೆಯ ಅನುಭವ ಹೊಂದಿದ್ದು, ಆರೋಗ್ಯ ಮೂಲಸೌಕರ್ಯಗಳನ್ನು ವೃದ್ಧಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಬೆಡ್ಸ್, ಐಸಿಯು, ಆಕ್ಸಿಜನ್ ಬೆಡ್ಸ್ ಗಳನ್ನು ಹೆಚ್ಚಿಸಲಾಗಿದೆ. ಜಿಲ್ಲೆಗಳಿಂದ ಔಷಧಿಗಳ ಬೇಡಿಕೆಯನ್ನು ತರಿಸಿಕೊಳ್ಳಲಾಗಿದೆ. ಚಿಕಿತ್ಸಾ ಸೌಲಭ್ಯಗಳಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ತಜ್ಞರ ಸಲಹೆಯ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಹಾರಾಷ್ಟ್ರ ಹಾಗೂ ಕೇರಳ ಜಿಲ್ಲೆಗಳ ಗಡಿ ಪ್ರದೇಶಗಳ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬುದಕ್ಕೆ ಪ್ರತಿಕ್ರಯಿಸಿ, ಗಡಿ ಪ್ರದೇಶಗಳು ವ್ಯಾಪಕವಾಗಿದೆ. ಪ್ರಮುಖ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಗಳು ಆಗುತ್ತಿದೆ. ಗಡಿ ಸಂಪರ್ಕವಿರುವ ಹಳ್ಳಿಗಳ ಮಟ್ಟದಲ್ಲಿ ತಪಾಸಣೆ ನಡೆಸಲು ಸಿಬ್ಮಂದಿ ನಿಯೋಜಿಸಿ ಚೆಕ್ ಪೋಸ್ಟ್ ಮಾಡುವ ಜೊತೆಗೆ ಆಯಾ ವ್ಯಾಪ್ತಿಯ ಪೊಲೀಸ್ ಸ್ಟೇಷನ್ ಗಳಿಗೆ ಈ ಹೊಣೆಗಾರಿಕೆಯನ್ನು ವಹಿಸಲಾಗುವ ಬಗ್ಗೆ ಇಂದು ಸಂಜೆ ಸಭೆಯಲ್ಲಿ ಸೂಚಿಸಲಾಗುವುದು ಎಂದರು.
ಲಾಕ್ ಡೌನ್, ಸೆಮಿ ಲಾಕ್ ಡೌನ್, ವೀಕೆಂಡ್ ಲಾಕ್ ಡೌನ್ ಹೇರುವ ಸಾಧ್ಯತೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಕೋವಿಡ್ ನ ಸ್ಥಿತಿಗತಿ, ಮುಂದಿನ ದಿನಗಳಲ್ಲಿ ಆಗಬಹುದಾದ ಬೆಳವಣಿಗೆಗ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಗಲಾಗುವುದು. ಕೋವಿಡ್ ನ ಎರಡೂ ಅಲೆಗಳ ಸಂದರ್ಭದಲ್ಲಿ ಆರ್ಥಿಕ ಹಿಂಜರಿಕೆ ಉಂಟಾಗಿತ್ತು, ಈಗ ಆರ್ಥಿಕ ಪರಿಸ್ಥಿತಿಇ ಸುಧಾರಿಸುತ್ತಿದೆ. ಆದ್ದರಿಂದ ಆರ್ಥಿಕ ಚಟುವಟಿಕೆಗಳಿಗೂ ತೊಂದರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ಸುರಕ್ಷತಾ ಕ್ರಮಗಳ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.