ಬಿಡದಿ ಅ 5 : ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲಿದೆ ಆದರೆ ಬಿಜೆಪಿ ಹೈಮಾಂಡ್ ನಾಗಪುರದಲ್ಲಿದೆ ಮತ್ತು ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಇದೆ. ಜೆಡಿಎಸ್ ಪಕ್ಷ ನಿಮ್ಮ ಸಮೀಪದಲ್ಲೇ ಇದೆ ನಾವು ನಿಮಗೆ ಸದಾ ಲಭ್ಯರಿರುತ್ತೇವೆ ಎಂದು ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ಮಿಷನ್ 123 ಕಾರ್ಯಾಗಾರದ ಆರನೇ ದಿನ ಎಸ್ ಸಿ, ಎಸ್ ಟಿ ಹಾಗೂ ಹಿಂದುಳಿದ ವರ್ಗದ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿ, ನಿಮ್ಮ ಕೂಗಳತೆಯಲ್ಲಿ ನಿಮ್ಮ ಪಕ್ಷದ ವರಿಷ್ಠ ನಾಯಕರು ಇದ್ದಾರೆ. ಕಾರ್ಯಕರ್ತರು ಹೈಕಮಾಂಡ್ ನೋಡಲು ವಿಮಾನ ಹತ್ತಿ ದೆಹಲಿಗೆ ಹೋಗಬೇಕಿಲ್ಲ. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ ಎಂದು ಅವರು ಹೇಳಿದ್ದಾರೆ.
ಮುಂದುವರೆದು, ಕಾಂಗ್ರೆಸ್ ಜತೆ ಮೈತ್ರಿ ಸರಕಾರ ಬಿದ್ದ ಮೇಲೆ ನಾನು ಈ ರಾಜಕೀಯದ ಬಗ್ಗೆ ಜಿಗುಪ್ಸೆಗೊಂಡಿದ್ದೆ. ಪರಸ್ಪರ ಕಾಲೆಳೆಯುವ ಪ್ರವೃತ್ತಿ ಕಂಡು ನನಗೆ ರಾಜಕೀಯ ಸಾಕೆನಿಸಿತ್ತು. ನಂಗೆ ನೆಮ್ಮದಿ ಬೇಕಿತ್ತು ಹಾಗಾಗಿ ಬಿಡದಿಯ ತೋಟ ಸೇರಿಕೊಂಡೆ ಎಂದಿದ್ದಾರೆ.
ಸಮ್ಮಿಶ್ರ ಸರಕಾರ ಹೋಗುತ್ತೆ ಅಂತ ನಂಗೆ ಗೊತ್ತಿತ್ತು. ಜನತೆಯ ಕೆಲಸ ಮಾಡಲು ಹೆಜ್ಜೆ ಹೆಜ್ಜೆಗೂ ಅಡ್ಡಿಗಳು, ಒತ್ತಡಗಳು. ಯಾವುದೇ ಸಂದರ್ಭದಲ್ಲೂ ಸರಕಾರ ಹೋಗುತ್ತದೆ ಅಂತ ಗೊತ್ತಿದ್ದೂ ನಾನು ಅಮೆರಿಕಕ್ಕೆ ಹೋದೆ. ಅಂತಹ ಹಂಗಿನ ಸರಕಾರ ನನಗೆ ಬೇಕಿರಲಿಲ್ಲ. ಮುಂದಿನ ಸಲ ಇದೇ ರೀತಿಯ ಅತಂತ್ರ ಸ್ಥಿತಿ ಬಂದರೆ ಮುಂದೆಂದೂ ನಾನು ಮತ ಕೇಳಲು ಬರುವುದಿಲ್ಲ ಎಂದಿದ್ದಾರೆ.
ಸರಕಾರ ಹೋದ ಮೇಲೆ ನಾನು ಬಿಡದಿ ತೋಟಕ್ಕೆ ಬಂದ ಮೇಲೆ ದಿನವೂ ಕಾರ್ಯಕರ್ತರು ಬರುತ್ತಿದ್ದರು. ಪಕ್ಷದ ಮೇಲಿನ ಅವರ ಪ್ರೀತಿ, ಬದ್ಧತೆ ನನ್ನ ರಾಜಕೀಯ ನಿವೃತ್ತಿಯ ನಿರ್ಧಾರವನ್ನು ಬದಲಿಸಿತು. ಬಿಡದಿಯಲ್ಲಿ ನೀವು ಕೂತಿರುವ ಈ ಜಾಗ ಹಾಗೂ ಈ ತೋಟ ನನ್ನ ಪಾಲಿನ ಪುಣ್ಯಭೂಮಿ. ನನ್ನ ಕಷ್ಟದ ದುಡಿಮೆಯಿಂದ 1983ರಲ್ಲಿ ಈ ಭೂಮಿಯನ್ನು ಖರೀದಿ ಮಾಡಿದೆ. ಕೃಷಿ ಮಾಡುವ ಉದ್ದೇಶ ನನಗಿತ್ತು. ಆದರೆ ಈ ಭೂಮಿ ನನ್ನನ್ನು ರಾಜಕೀಯಕ್ಕೆ ಎಳೆದು ತಂದಿತು ಎಂದು ತಿಳಿಸಿದರು.