ಬೆಂಗಳೂರು ನ 24 : ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎ. ಮಂಜು ಅವರಿಗೆ ನೀಡಿದ್ದ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಬಿಜೆಪಿ ಆದೇಶಿಸಿದೆ.
ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಅರಕಲಗೂಡಿನ ಮಾಜಿ ಶಾಸಕ ಎ. ಮಂಜುಗೆ ನೀಡಿದ್ದ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಪ್ರಭಾರಿ ಸೇರಿದಂತೆ ಹಲವು ಜವಾಬ್ದಾರಿಗಳಿಂದ ಅವರನ್ನು ಮುಕ್ತಗೊಳಿಸಲಾಗಿದೆ.
ಇತ್ತೀಚೆಗೆ ಮಂಜು ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸೇರುವ ಕುರಿತು ಒಲವು ವ್ಯಕ್ತಪಡಿಸಿದ್ದರು. ಜೊತೆಗೆ ವಿಧಾನ ಪರಿಷತ್ ಚುನಾವಣೆಗೆ ಕೊಡಗು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎ ಮಂಜು ಅವರ ಪುತ್ರ ಡಾ. ಮಂಥರ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ ಈ ತೀರ್ಮಾನವನ್ನು ತೆಗೆದುಕೊಂಡಿದೆ.