ಬೆಂಗಳೂರು, ಮೇ. 11: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ 2ನೇ ಅಲೆ ತಡೆಗಾಗಿ ವಿಧಿಸಲಾಗಿರುವ ಲಾಕ್ಡೌನ್ ನಿಯಮ ಉಲ್ಲಂಘಿಸಿದವರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಲಾಠಿಚಾರ್ಜ್ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅನಗತ್ಯವಾಗಿ ಬಲ ಪ್ರಯೋಗ ಮಾಡದಂತೆ ನಿರ್ದೇಶನ ಕೊಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಒಂದು ವೇಳೆ ಸಾರ್ವಜನಿಕರು ಲಾಕ್ ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡು ಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಕ್ರಮಕೈಗೊಳ್ಳಬೇಕು. ಇದರ ಹೊರತು ಯಾವುದೇ ಬಲ ಪ್ರಯೋಗ ಮಾಡಬಾರದು ಎಂದು ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಹಾಗೆಯೇ ಲಾಕ್ಡೌನ್ ಸಮಯದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಒಪ್ಪಿಗೆ ನೀಡಲಾದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಂಚಾರ ಅವಶ್ಯವಿದ್ದಲ್ಲಿ ಅದರ ಕುರಿತಂತೆ ಮಾಹಿತಿಗಾಗಿ ಕರೆ ಮಾಡಬಹುದು ಎಂದು ನಂಬರ್ ವೊಂದನ್ನು ಹಾಕಿದ್ದಾರೆ.