ಬೆಂಗಳೂರು, ಜ. 21: ಕೇಂದ್ರದ ಕೃಷಿ ಕಾಯ್ದೆಗಳನ್ನು ಖಂಡಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯನ್ನು ಖಂಡಿಸಿರುವ ನಟ ಚೇತನ್, ಕಾಂಗ್ರೆಸ್ ತನ್ನ ರಾಜಕೀಯ ಅವಕಾಶವಾದ ಮತ್ತು ಬೂಟಾಟಿಕೆಗಳನ್ನು ನಿಲ್ಲಿಸಬೇಕು ಎಂದಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿನ್ನೆಲೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬೆಂಗಳೂರಿನಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಿದೆ.
ಆದರೆ, ತನ್ನ 2019ರ ಚುನಾವಣಾ ಪ್ರಣಾಳಿಕೆಯಲ್ಲಿ, ಕಾಂಗ್ರೆಸ್ ಪಕ್ಷವು ಎಪಿಎಂಸಿಗಳನ್ನು ರದ್ದುಗೊಳಿಸಲು ಮತ್ತು ಕೃಷಿ ವ್ಯಾಪಾರವನ್ನು ಎಲ್ಲಾ ನಿರ್ಬಂಧಗಳಿಂದ ಮುಕ್ತಗೊಳಿಸಲು ಯೋಜಿಸಿದೆ. ಆದರೆ ಇದು ಸಹ ಬಿಜೆಪಿಯ ರೈತ ವಿರೋಧಿ ನೀತಿಗಳಂತೆಯೇ ಇದೆ ಎಂದು ಟೀಕಿಸಿದ್ದಾರೆ.
ಹೀಗಾಗಿ ರೈತರ ಪರ ಹೋರಾಟ ನಡೆಸುತ್ತಿರುವ ಕರ್ನಾಟಕ ಕಾಂಗ್ರೆಸ್ ಪಕ್ಷ ತನ್ನ ರಾಜಕೀಯ ಅವಕಾಶವಾದ ಮತ್ತು ಬೂಟಾಟಿಕೆಗಳನ್ನು ನಿಲ್ಲಿಸಬೇಕು ಎಂದು ಕಿಡಿಕಾರಿದ್ದಾರೆ.