ಬೆಂಗಳೂರು, ಏ. 16: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಸಾಗಾಟಕ್ಕೆ ಸೂಕ್ತ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ
ಸೋಂಕಿತರ ಸಾಗಾಟಕ್ಕೆ ಆ್ಯಂಬುಲೆನ್ಸ್ಗಳ ವ್ಯವಸ್ಥೆ ಮಾಡಲಾಗಿದ್ದು, 198 ವಾರ್ಡ್ಗಳಿಗೆ ಗುತ್ತಿಗೆ ಆಧಾರದಲ್ಲಿ 260 ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಆ ಮೂಲಕ ಮನೆಯಿಂದ ಆಸ್ಪತ್ರೆಗೆ ಕೊಂಡೊಯ್ಯಲು ಉಚಿತ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಅಲ್ಲದೇ ಕೊರೊನಾ ಸೋಂಕಿನಿಂದ ಮೃತಪಟ್ಟವರ ಮೃತದೇಹವನ್ನು
ವಿದ್ಯುತ್ ಚಿತಾಗಾರಗಳಿಗೆ ಸಾಗಿಸಲು ಸಹ ಸೂಕ್ತ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು. ಜತೆಗೆ ಬೆಂಗಳೂರಿನ 7 ವಿದ್ಯುತ್ ಚಿತಾಗಾರಗಳಲ್ಲಿ ಕೊರೊನಾ ಸೋಂಕಿತರ ಶವಸಂಸ್ಕಾರ ಕೂಡ್ಲು (ಬೊಮ್ಮನಹಳ್ಳಿ ವಲಯ), ಪಣತ್ತೂರ್ (ಮಹದೇವಪುರ ವಲಯ), ಮೇಡಿ ಅಗ್ರಹಾರ (ಯಲಹಂಕ ವಲಯ), ಕೆಂಗೇರಿ (ಆರ್.ಆರ್.ನಗರ ವಲಯ), ಬನಶಂಕರಿ (ದಕ್ಷಿಣ ವಲಯ), ಪೀಣ್ಯ (ದಾಸರಹಳ್ಳಿ ವಲಯ), ಸುಮನಹಳ್ಳಿ (R.R.ನಗರ ವಲಯ)ಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಶವ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಸಲಾದ ಹಿರಿಯ ಅಧಿಕಾರಿಗಳ ಜತೆಗಿನ ಸಭೆಯ ಕುರಿತು ಮಾತನಾಡಿದ ಅವರು, ಏ.18ರಂದು ಸರ್ವಪಕ್ಷ ಸಭೆ ನಡೆಸಲಿದ್ದು, ಈ ಸಭೆಯಲ್ಲಿ ವಿಪಕ್ಷಗಳ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಲ್ಲದೇ ಬೆಂಗಳೂರಿನಲ್ಲಿ ಕಂಟೇನ್ಮೆಂಟ್ ಝೋನ್ ಹೆಚ್ಚಳ ಮಾಡುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಇನ್ನೂ ಕ್ವಾರಂಟೈನ್ನಲ್ಲಿರುವವರ ಮೇಲೆ ನಿಗಾವಹಿಸುವುದರ ಜತೆಗೆ ಬೆಂಗಳೂರಿನಲ್ಲಿ ಹಾಸಿಗೆ ಸಮಸ್ಯೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದರು.
ರಾಜ್ಯದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ, 3,4,5 ಸ್ಟಾರ್ ಹೋಟೆಲ್ಗಳಲ್ಲಿ ತಾತ್ಕಾಲಿಕ ಆಸ್ಪತ್ರೆ ವ್ಯವಸ್ಥೆ ಕಲ್ಪಿಸಲಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ 1 ಸಾವಿರ ಹಾಸಿಗೆ ಮೀಸಲಿಡಲಾಗುತ್ತದೆ. ರಾಜಧಾನಿ ಬೆಂಗಳೂರಿನಲ್ಲಿ ಒಟ್ಟು 5 ಸಾವಿರ ಹಾಸಿಗೆ ಕೋವಿಡ್ಗೆ ಮೀಸಲಿಡಲಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ಮೀಸಲಿರಿಸಲಾಗುವುದು ಎಂದು ತಿಳಿಸಿದರು.