ನವ ದೆಹಲಿ, ಏ. 23: ದೇಶದಲ್ಲಿ ಕೊರೋನಾ ವೈರಸ್ ದಿನೇ ದಿನೇ ಉಲ್ಭಣವಾಗುತ್ತಿದೆ. ಈ ನಡುವೆ ಕೊರೋನಾ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ಲಭಯವಾಗುತ್ತಿಲ್ಲ. ಆಮ್ಲಜನಕ ಕೊರತೆ ಉಂಟಾಗುತ್ತಿರುವ ಸುದ್ದಿ ಎಲ್ಲೆಡೆ ಸದ್ದು ಮಾಡುತ್ತಿದೆ. ಈ ನಡುವೆ ಇಂದು ಟ್ವೀಟ್ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ, “ಕೊರೋನಾ ಉಲ್ಬಣವಾಗುತ್ತಿರುವ ಈ ಹೊತ್ತಿನಲ್ಲಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕ ಮತ್ತು ಐಸಿಯು ಹಾಸಿಗೆಗಳ ಕೊರತೆಯಿಂದ ಸಾವನ್ನಪ್ಪುತ್ತಿರುವ ಕೊರೋನಾ ರೋಗಿಗಳ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ” ಎಂದು ಕಿಡಿಕಾರಿದ್ದಾರೆ.
ಈ ನಡುವೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದ್ದು, ರಾಜ್ಯ ಸರ್ಕಾರಗಳೂ ಪರಸ್ಪರ ಸಹಕರಿಸುವ ಮೂಲಕ ಸವಾಲನ್ನು ಸಮರ್ಥವಾಗಿ ಎದುರಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ಅವರು ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಈ ವಿಷಯ ತಿಳಿಸಿದ್ದಾರೆ.