ಚಾಮರಾಜನಗರ, ಮೇ. 06: ಆಕ್ಸಿಜನ್ ಸಿಗದೆ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ 24 ಕೊರೊನಾ ಸೋಂಕಿತ ರೋಗಿಗಳು ಸಾವಿಗೀಡಾದ ಪ್ರಕರಣದ ತನಿಖೆಯನ್ನು ನ್ಯಾಯಾಂಗ ತನಿಖೆ ಒಪ್ಪಿಸುವುದಾಗಿ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದ ಬೆನ್ನಲ್ಲೇ ಚಾಮರಾಜನಗರ ಹಾಗೂ ಮೈಸೂರು ಜಿಲ್ಲಾಧಿಕಾರಿ ಕಚೇರಿಗಳ ದಾಖಲೆಗಳನ್ನು ಜಪ್ತಿ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ ಎನ್ನಲಾಗಿದೆ.
ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಬುಧವಾರ ಸಲ್ಲಿಕೆಯಾಗಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ವಿಚಾರವಾಗಿ ನಿನ್ನೆ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವ ಅಗತ್ಯವಿದೆ ಎಂದು ಹೇಳಿತ್ತಲ್ಲದೆ ಈ ಕುರಿತು ರಾಜ್ಯ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿತ್ತು. ಈ ಬಗ್ಗೆ ಇಂದು ಹೈಕೋರ್ಟ್ಗೆ ಮಾಹಿತಿ ನೀಡಿದ ಅಡ್ವೊಕೇಟ್ ಜನರಲ್, ಪ್ರಕರಣದ ತನಿಖೆಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಅವರ ಏಕಸದಸ್ಯ ಆಯೋಗ ರಚಿಸಲಾಗಿದೆ ಎಂದರು.
ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ನಾವು ನ್ಯಾಯಾಂಗ ತನಿಖೆ ನಡೆಸುವ ಕುರಿತು ಸರ್ಕಾರದ ನಿಲುವನ್ನು ಮಾತ್ರವೇ ಕೇಳಿದ್ದೆವು, ಆದೇಶ ಹೊರಡಿಸಲು ಹೇಳಿರಲಿಲ್ಲ. ನಿವೃತ್ತ ನ್ಯಾಯಮೂರ್ತಿ ನೇಮಕವನ್ನು ಹೈಕೋರ್ಟ್ಗೆ ಬಿಡಬೇಕಿತ್ತು ಎಂದು ಹೇಳಿತಲ್ಲದೆ ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದರೆ ಕೂಡಲೇ ದಾಖಲೆಗಳನ್ನು ಜಪ್ತಿ ಮಾಡಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿತು.
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗಳಲ್ಲಿರುವ ಹಾಗೂ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿರುವ ಆಕ್ಸಿಜನ್ ಪೂರೈಕೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಜಪ್ತಿ ಮಾಡುವಂತೆ ಕೋರ್ಟ್ ಆದೇಶಿಸಿದೆ. ಈಗಾಗಲೇ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿ ಈ ದಾಖಲೆಗಳನ್ನು ಪರಿಶೀಲಿಸಬಹುದು ಎಂದು ಸ್ಪಷ್ಟಪಡಿಸಿದೆ.