ಬೆಂಗಳೂರು, ಮಾ. 27: ಮಹಾಮಾರಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡುತ್ತಲೇ ಇರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊರೊನಾ ಸೋಂಕು, ಸಾವು, ಚಿಕಿತ್ಸೆ ಮತ್ತು ನೊಂದ ಕುಟುಂಬಗಳಿಗೆ ನೀಡಿರುವ ಪರಿಹಾರದ ಬಗ್ಗೆ ರಾಜ್ಯದ ಬಿಜೆಪಿ ಸರ್ಕಾರ ತಕ್ಷಣ ಶ್ವೇತಪತ್ರ ಹೊರಡಿಸಿ ನಿಜಸಂಗತಿಯನ್ನು ರಾಜ್ಯದ ಜನತೆಗೆ ತಿಳಿಸಬೇಕೆಂದು ಆಗ್ರಹಿಸಿದ್ದಾರೆ.
ಬಿಜೆಪಿ ಸರ್ಕಾರ ಸುಳ್ಳು ಹೇಳಿರುವುದು ಕೊರೊನಾ ಸಾವಿನ ಬಗ್ಗೆ ಮಾತ್ರ ಅಲ್ಲ, ಔಷಧಿ, ಮಾಸ್ಕ್, ಸ್ಯಾನಿಟೈಸರ್ ಪಿಪಿ ಕಿಟ್ ಗಳಿಂದ ಹಿಡಿದು ಆಸ್ಪತ್ರೆಗಳ ಹಾಸಿಗೆ ಖರೀದಿ ವರೆಗೆ ಎಲ್ಲದರಲ್ಲಿಯೂ ನಡೆದಿರುವ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಸಿಎಂ ಬಿ.ಎಸ್.ವೈ ಮತ್ತು ಸಚಿವ ಡಾ.ಕೆ.ಸುಧಾಕರ್ ಸುಳ್ಳು ಹೇಳುತ್ತಲೇ ಇದ್ದಾರೆ ಎಂದು ಆರೋಪಿಸಿದ್ದಾರೆ.
ಕೊರೊನಾ ಉಲ್ಭಣಕ್ಕೆ ಬಿಜೆಪಿ ಸರ್ಕಾರದ ಅಸಾಮರ್ಥ್ಯ, ಭ್ರಷ್ಟಾಚಾರ ಹಾಗೂ ಸುಳ್ಳುಗಳು ಕಾರಣ ಎಂದು ಮೊದಲ ದಿನದಿಂದ ಹೇಳುತ್ತಾ ಬಂದಿದ್ದೇನೆ. ತಪ್ಪನ್ನು ತಿದ್ದಿಕೊಳ್ಳದೆ ಎಲ್ಲವನ್ನು ಸಮರ್ಥಿಸಿಕೊಂಡ ಸರ್ಕಾರದ ಲಜ್ಜೆಗೇಡಿತನದ ಫಲವನ್ನು ರಾಜ್ಯದ ಜನ ಅನುಭವಿಸಬೇಕಾಗಿದೆ.
ರಾಜ್ಯದ ಆರೋಗ್ಯ ಇಲಾಖೆ ದಾಖಲೆ ಪ್ರಕಾರ 2020ರ ಡಿಸೆಂಬರ್ ವರೆಗಿನ ಕೊರೊನಾ ಸಾವಿನ ಸಂಖ್ಯೆ- 12,090. ರಾಜ್ಯ ಯೋಜನಾ ಮತ್ತು ಅಂಕಿ ಅಂಶ ಇಲಾಖೆಯ ಪ್ರಕಾರ ಇದೇ ಅವಧಿಯಲ್ಲಿ ಕೊರೊನಾ ಸಾವಿನ ಸಂಖ್ಯೆ- 22,320 ಆಗಿದೆ. ಬಿಎಸ್ವೈ ಹಾಗೂ ಸುಧಾಕರ್ ಇದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು? ಎಂದು ಪ್ರಶ್ನಿಸಿದ್ದಾರೆ.