ಮೈಸೂರು, ಜು. 06: ಕೋವಿಡ್-19 ಆತಂಕದ ಹಿನ್ನೆಲೆಯಲ್ಲಿ ಆಷಾಢ ಶುಕ್ರವಾರದಂದು ಮೈಸೂರಿನ ಐತಿಹಾಸಿಕ ಪ್ರವಾಸಿ ತಾಣವಾದ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ಆಷಾಢ ಶುಕ್ರವಾರಗಳಂದು ಬೆಟ್ಟಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸುವ ಸಾಧ್ಯತೆ ಹೆಚ್ಚಾಗಿದ್ದು, ಈ ಕಾರಣದಿಂದ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದ್ದು, ಚಾಮುಂಡಿಬೆಟ್ಟ ಮಾತ್ರವಲ್ಲದೇ ಉತ್ತನಹಳ್ಳಿಯ ತ್ರಿಪುರ ಸುಂದರಿ ಜ್ವಾಲಾಮುಖಿ ದೇವಾಲಯಕ್ಕೂ ಸಹ ಭಕ್ತರು ಭೇಟಿ ನೀಡಿದಂತೆ ನಿರ್ಬಂಧ ವಿಧಿಸಿ ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಡಳಿತ ಆದೇಶದನ್ವಯ 09/07/2021 ಆಷಾಡ ಅಮಾವಾಸ್ಯೆ, 16/07/2021 ಮೊದಲನೇ ಆಷಾಡ ಶುಕ್ರವಾರ, 23/07/2021 2ನೇ ಆಷಾಡ ಶುಕ್ರವಾರ, 30/07/2021 3ನೇ ಆಷಾಡ ಶುಕ್ರವಾರ ಹಾಗೂ ನಾಡದೇವತೆ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ, 06/08/2021 4ನೇ ಆಷಾಡ ಶುಕ್ರವಾರ, 08/08/2021 ಭೀಮನ ಆಮಾವಾಸ್ಯೆ ದಿನ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ ಶನಿವಾರ, ಭಾನುವಾರ ಮತ್ತು ಸರ್ಕಾರಿ ಸಾರ್ವತ್ರಿಕ ರಜಾ ದಿನಗಳಂದು ಸಹ ನಿರ್ಬಂಧ ಮುಂದುವರಿಯಲಿದೆ.