ಬೆಂಗಳೂರು ಸೆ 27 : ಕೊರೊನಾ 2ನೇ ಅಲೆಗೆ ಕರ್ನಾಟಕ ತೀವ್ರವಾಗಿ ಸಿಲುಕಿ ಸಾಕಷ್ಟು ಸಂಕಷ್ಟ ಎದುರಿಸಿತ್ತು. ಕೊರೋನಾ ಹಿನ್ನೆಲೆಯಲ್ಲಿ ಸ್ತಬ್ಧವಾಗಿದ್ದ ಹೆಚ್ಚಿನ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಸೋಂಕು ಹೆಚ್ಚಾಗುವ ಭೀತಿಯೂ ಇದೆ. ರಾಜ್ಯ ಸರ್ಕಾರ ಕೊರೋನಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲನೆ ಮಾಡುತ್ತಿದ್ದು, ಮೂರನೇ ಅಲೆ ತಡೆಗೆ ಸಂಪೂರ್ಣ ಸನ್ನದ್ಧವಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಕೊರೋನಾ ಮೂರನೇ ಅಲೆ ಗಂಭೀರ ಪರಿಣಾಮ ಬೀರಬಹುದು ಅಥವಾ ಬೀರದೇ ಇರಬಹುದು. ಏನೇ ಆದರೂ ಅದಕ್ಕಾಗಿ ಸಂಪೂರ್ಣ ಸನ್ನದ್ಧವಾಗಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ವೈದ್ಯಕೀಯ ವ್ಯವಸ್ಥೆಗಳನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಶಾಲೆಗಳಲ್ಲಿಯೂ ಕೊರೋನಾ ಮಾರ್ಗಸೂಚಿಗಳ ಪಾಲನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಈ ಸಂಬಂಧ ಪೋಷಕರು ಭಯ ಪಡುವ ಅಗತ್ಯ ಇಲ್ಲ ಎಂದು ಅವರು ತಿಳಿಸಿದ್ದಾರೆ. ದೊಡ್ಡ ಮಟ್ಟದಲ್ಲಿ ಲಸಿಕೀಕರಣವೂ ನಡೆಯುತ್ತಿದ್ದು, ಕೊರೋನಾ ನಿಯಂತ್ರಣಕ್ಕಾಗಿ ಅಗತ್ಯವಾದ ಎಲ್ಲಾ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.