ಕರ್ನಾಟಕದ ಕೋವಿಡ್ ಮಾರ್ಗಸೂಚಿಗಳು ಕೇಂದ್ರದ ನಿರ್ದೇಶನಕ್ಕೆ ವಿರುದ್ಧ: ಕೇರಳ ಸಿಎಂ

ಕೇರಳ, ಆ. 05: ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕವು ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಮೇಲೆ ಪ್ರಯಾಣ ನಿರ್ಬಂಧಗಳನ್ನು ಹೇರಿದೆ. ಆದರೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಈ ನಿರ್ಬಂಧಗಳು ಕೇಂದ್ರದ ನಿರ್ದೇಶನಕ್ಕೆ ವಿರುದ್ಧವಾಗಿವೆ ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ, ರಾಜ್ಯಗಳು ತಮ್ಮ ಗಡಿಗಳನ್ನು ಮುಚ್ಚುವ ಮೂಲಕ ಪ್ರಯಾಣ ನಿರ್ಬಂಧಗಳನ್ನು ಹೇರಬಾರದು ಎಂದು ಹೇಳಿದೆ ಎಂದು ಅವರು ವಾದಿಸಿದ್ದಾರೆ.

ಶಾಸಕ ಎಕೆಎಂ ಅಶ್ರಫ್ (ಐಯುಎಂಎಲ್) ಅವರ ವರದಿ ಸಲ್ಲಿಕೆಗೆ ಉತ್ತರಿಸಿದ ಅವರು, ವಿವಿಧ ಉದ್ದೇಶಗಳಿಗಾಗಿ ನೆರೆಯ ರಾಜ್ಯಕ್ಕೆ ಪ್ರಯಾಣಿಸುತ್ತಿರುವ ರಾಜ್ಯದ ಜನರಿಗೆ ನಿರ್ಬಂಧಗಳಿಂದ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ರಾಜ್ಯ ಡಿಜಿಪಿ ಅನಿಲ್ ಕಾಂತ್ ಅವರು ಈಗಾಗಲೇ ಕರ್ನಾಟಕದ ಡಿಜಿಪಿಯನ್ನು ಸಂಪರ್ಕಿಸಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಖಚಿತಪಡಿಸಿದ್ದಾರೆ.

ಕರ್ನಾಟಕ ವಿಧಿಸಿರುವ ನಿರ್ಬಂಧಗಳನ್ನು ವಿವರಿಸಿದ ಮುಖ್ಯಮಂತ್ರಿ, ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು 72 ಗಂಟೆಯೊಳಗಿನ ಆರ್‌ಟಿ-ಪಿಸಿಆರ್ ಕೋವಿಡ್ ನೆಗೆಟಿವ್ ವರದಿ ತೋರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆಗಸ್ಟ್ 2 ರಿಂದಲೇ ಆ ರಾಜ್ಯದ ಅಧಿಕಾರಿಗಳು ತಲಪಾಡಿಯ ಗಡಿ ಚೆಕ್ ಪೋಸ್ಟ್‌ನಲ್ಲಿ ತಪಾಸಣೆಯನ್ನು ಚುರುಕುಗೊಳಿಸಿದ್ದಾರೆ ಎಂದು ಹೇಳಿದರು.

Exit mobile version