ಬೆಂಗಳೂರು, ಡಿ. 3: ರಾಜ್ಯದಲ್ಲಿ ವೈದೇಹಿ ವೈದ್ಯಕೀಯ ಹಾಗೂ ವಿಜ್ಞಾನ ಸಂಸ್ಥೆಯಲ್ಲಿ ಭಾರತ್ ಬಯೋಟೆಕ್ ಸಹಯೋಗದಲ್ಲಿ ಕೊವ್ಯಾಕ್ಸಿನ್ ಕೋವಿಡ್ ಲಸಿಕೆಯ 3 ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ. ಚಾಲನೆ ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ರಾಜ್ಯಕ್ಕೆ ಇದು ಹೆಮ್ಮೆಯ ವಿಷಯವಾಗಿದೆ. ದೇಶದ 12 ರಾಜ್ಯಗಳ 25 ಭಾಗಗಳಲ್ಲಿ ಪ್ರಯೋಗ ನಡೆಯುತ್ತಿದ್ದು, ಸುಮಾರು 26 ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತಿದೆ. ರಾಜ್ಯದಲ್ಲಿ 1,600-1,800 ಜನರಿಗೆ ಲಸಿಕೆಯನ್ನು ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ. ಲಸಿಕೆ ನೀಡುವ ಸಮಯದಲ್ಲಿ ಊಹಾಪೋಹಗಳು ಕೇಳಿಬರುತ್ತವೆ. ಆದರೆ ಇದಕ್ಕೆ ಯಾರೂ ಕಿವಿಗೊಡಬಾರದು ಎಂದರು. ಲಸಿಕೆ ದೊರೆತ ಬಳಿಕ ಉಚಿತವಾಗಿ ಎಲ್ಲರಿಗೂ ಲಸಿಕೆ ನೀಡಲಾಗುವುದೆಂದು ಹೇಳಿದ್ದಾರೆ.
ಪ್ರಪಂಚದಲ್ಲಿ ಶೇ.15 ರಿಂದ ಶೇ.20 ರಷ್ಟು ಭಾರತೀಯ ಕಂಪನಿಗಳೇ ಲಸಿಕೆ ನೀಡುವ ಮಟ್ಟಿಗೆ ಬೆಳೆದಿದೆ. ಇದನ್ನು ನಮ್ಮ ತಜ್ಞರು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ಆದ್ದರಿಂದ ಯಾವುದೇ ಆತಂಕ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ಸಂಶೋಧನೆಗೆ 900 ಕೋಟಿ ರೂ. ಮೀಸಲಿಟ್ಟಿದ್ದಾರೆ. ಲಸಿಕೆ ಪ್ರಯೋಗ ನಡೆಯುತ್ತಿರುವ ಸಂಸ್ಥೆಗಳಿಗೆ ಖುದ್ದಾಗಿ ಪ್ರಧಾನಿ ಮೋದಿಯವರೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೋವಿಡ್ ಚಿಕಿತ್ಸೆಗಾಗಿ 300 ಕೋಟಿ ರೂ. ಗೂ ಹೆಚ್ಚು ಹಣ ಬಿಡುಗಡೆ ಮಾಡಿ ಉಚಿತ ಚಿಕಿತ್ಸೆ ನೀಡಿದೆ. ದಿನಕ್ಕೆ 1.25 ಲಕ್ಷ ಪರೀಕ್ಷೆ ಮಾಡುತ್ತಿದ್ದು, ಈವರೆಗೆ 1.20 ಕೋಟಿ ಉಚಿತ ಪರೀಕ್ಷೆ ಮಾಡಲಾಗಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಲಸಿಕೆ ವಿತರಣೆಗೆ ಸಿದ್ಧತೆ ಪೂರ್ಣಗೊಂಡಿದೆ. 29,451 ಲಸಿಕೆ ವಿತರಣೆ ಕೇಂದ್ರ ಹಾಗೂ 10,008 ಸಿಬ್ಬಂದಿಯನ್ನು ಗುರುತಿಸಲಾಗಿದೆ. ಲಸಿಕೆ ಸಂಗ್ರಹ ಹಾಗೂ ವಿತರಣೆಗೆ 2,855 ಕೋಲ್ಡ್ ಚೇನ್ ಕೇಂದ್ರಗಳು ಲಭ್ಯವಿದೆ. ಹೊಸದಾಗಿ ಬೆಂಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.