ರಾಯಗಡ ದುರಂತ: 11 ಮಂದಿ ಸಾವು

ರಾಯಗಡ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ನಡೆದಿರುವ ಐದು ಅಂತಸ್ತಿನ ಕಟ್ಟಡ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ ಏರುತ್ತಲೇ ಸಾಗಿದ್ದು ಅವಶೇಷಗಳಡಿಯಲ್ಲಿ ಮತ್ತೆ 9 ಮೃತದೇಹಗಳು ಪತ್ತೆಯಾಗಿದೆ.

ಸೋಮವಾರ ತಡ ರಾತ್ರಿ ಈ ಘಟನೆ ನಡೆದಿದ್ದು, ತಕ್ಷಣ ಎನ್‌ಡಿಆರ್‌ಎಫ್‌ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಹಲವರನ್ನ ರಕ್ಷಿಸಿದ್ದರು. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರೆ, ಗಾಯಗೊಂಡಿದ್ದ 18 ಮಂದಿಯನ್ನು ರಕ್ಷಣೆ ಮಾಡಿದ್ದರು.

ಮಂಗಳವಾರ ಮುಂದುವರಿದ ಕಾರ್ಯಾಚರಣೆಯಲ್ಲಿ ಹಲವರ ರಕ್ಷಣೆ ನಡೆದಿದ್ದು, ಒಟ್ಟಾರೆ 11 ಮಂದಿ ಮೃತಪಟ್ಟಿದ್ದಾರೆ. ಆದರೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಇನ್ನೂ 60ಕ್ಕೂ ಹೆಚ್ಚು ಮಂದಿ ಸಿಲುಕಿಕೊಂಡಿರುವ ಶಂಕೆಗಳು ವ್ಯಕ್ತವಾಗಿದೆ.

ಕಟ್ಟಡಲ್ಲಿ 45 ಫ್ಲ್ಯಾಟ್ ಗಳಿದ್ದು, ಸೋಮವಾರ ರಾತ್ರಿಯೇ ಅವಶೇಷಗಳಡಿ ಸಿಲುಕಿಕೊಂಡಿದ್ದ 25 ಮಂದಿನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆ.

ಘಟನೆಗೆ ಸಂಬಂದಿಸಿದಂತೆ ಡೆವಲಪರ್‌ಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

Exit mobile version