ನವದೆಹಲಿ, ಮೇ. 28: ದೆಹಲಿಯಲ್ಲಿ ಸದ್ಯ ಕೊರೊನಾ ನಿಯಂತ್ರಣದಲ್ಲಿದ್ದು, ಹಂತಹಂತವಾಗಿ ಲಾಕ್ಡೌನ್ ಸಡಿಲಿಸುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದು, ಇದೇವೇಳೆ, ಕೊರೊನಾ ವೈರಸ್ ವಿರುದ್ಧದ ಹೋರಾಟ ಇನ್ನೂ ನಿಂತಿಲ್ಲ ಎಂದು ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ನಡೆದ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ, ಲಾಕ್ಡೌನ್ ಅನ್ನು ಹಂತ ಹಂತವಾಗಿ ತೆಗೆಯಲು ನಿರ್ಧರಿಸಲಾಯಿತು. ಈ ಪ್ರಕ್ರಿಯೆಯಲ್ಲಿ, ನಾವು ಮೊದಲು ಅತ್ಯಂತ ಕೆಳ ಹಂತದ ಕಾರ್ಮಿಕರ ಬಗ್ಗೆ ಯೋಚಿಸಬೇಕಿದೆ. ದಿನಗೂಲಿ ಕೆಲಸಗಾರರು, ಕಾರ್ಮಿಕರು, ವಲಸೆ ಕಾರ್ಮಿಕರ ಬಗ್ಗೆ ಗಮನಹರಿಸಬೇಕು’ಎಂದು ಅವರು ಹೇಳಿದರು.
ಕಾರ್ಖಾನೆಗಳನ್ನು ತೆರೆಯಲು ಮತ್ತು ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಪ್ರತಿ ವಾರ ತಜ್ಞರ ಮತ್ತು ಸಾರ್ವಜನಿಕ ಅಭಿಪ್ರಾಯವನ್ನು ಆಧರಿಸಿ ಅನ್ಲಾಕ್ ಪ್ರಕ್ರಿಯೆಯನ್ನು ಸರ್ಕಾರ ಮುಂದುವರಿಸಲಿದೆ ಎಂದು ಅವರು ಹೇಳಿದರು.