ಬೆಂಗಳೂರಿನ (Bengaluru) ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರು ತಮಿಳರ ವಿರುದ್ದ ದ್ವೇಷಪೂರಿತ ಹೇಳಿಕೆ ನೀಡಿದ್ದು, ಇವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.
ಶೋಭಾ ಕರಂದ್ಲಾಜೆ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ತಮಿಳುನಾಡಿನ (Tamilnadu) ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಪಕ್ಷದ ಸಂಘಟನಾ ಕಾರ್ಯದರ್ಶಿ ಆರ್.ಎಸ್ ಭಾರತಿ (R S Bharathi) ಅವರು ನಿನ್ನೆ (ಮಾ.20) ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ (Notice) ಜಾರಿಗೊಳಿಸಿರುವ ಕೇಂದ್ರ ಚುನಾವಣಾ ಆಯೋಗ, ಮಾದರಿ ನೀತಿ ಸಂಹಿತೆ ಉಲ್ಲಂಘಣೆಗೆ ಸಂಬಂಧಪಟ್ಟಂತೆ ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು 48 ಗಂಟೆಗಳ ಒಳಗೆ ವರದಿ ನೀಡಬೇಕು ಎಂದು ಆದೇಶಿಸಿದೆ.
ತರಬೇತಿ ಪಡೆದು ತಮಿಳುನಾಡಿನಿಂದ ಬರುತ್ತಾರೆ. ಇಲ್ಲಿ ಬಂದು ಬಾಂಬ್ (Bomb) ಹಾಕುತ್ತಾರೆ. ತಮಿಳುನಾಡಿನಿಂದ ಬಂದ ವ್ಯಕ್ತಿಯೊಬ್ಬ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟಿದ್ದ. ದೆಹಲಿಯಿಂದ (Delhi) ಬಂದ ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿದ್ದ. ಕೇರಳದಿಂದ ಬಂದ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಆ್ಯಸಿಡ್ (Acid) ಎರಚಿದ್ದ” ಎಂದು ಶೋಭಾ ಕರಂದ್ಲಾಜೆ ಅವರು ಮಂಗಳವಾರ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯೊಂದರ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ್ದರು.