ಶೀಘ್ರದಲ್ಲೇ 5000 ಶಿಕ್ಷಕರ ನೇಮಕಾತಿ

ಬೆಂಗಳೂರು ಸೆ 15 : ರಾಜ್ಯಾದ್ಯಂತ ಖಾಲಿಯಿರುವ ಶಿಕ್ಷಕರ ಹುದ್ದೆಯನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ಸಚಿವ ಸುರೇಶ್ ಕುಮಾರ್ ಅವರ ಅವಧಿಯಲ್ಲಿ ಹತ್ತು ಸಾವಿರ ಶಿಕ್ಷಕರ‌ನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗಿತ್ತು. ಮೂರು ಸಾವಿರ ಶಿಕ್ಷಕರು ಅರ್ಹತೆ ಪಡೆದುಕೊಂಡಿದ್ದರು. ಆ ಬಳಿಕ ಕೊರೋನಾ ಸೋಂಕು ಉಲ್ಬಣವಾದ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಸ್ಥಗಿತವಾಗಿತ್ತು. ಈ ಬಾರಿ ಇದಕ್ಕೆ ಮತ್ತೆ ಚಾಲನೆ ನೀಡಲಾಗಿದ್ದು, 5 ಸಾವಿರ ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಟಿಇಟಿ ಮತ್ತು ಸಿಇಟಿ ಮೂಲಕ ಐದು ಸಾವಿರ ಶಿಕ್ಷಕರ‌ನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಈ ನೇಮಕಾತಿ ಪ್ರಕ್ರಿಯೆಯಿಂದ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆ‌ಗಳು ಮತ್ತಷ್ಟು ಸುಧಾರಣೆಯಾಗಲಿವೆ ಎಂದು ಅವರು ಹೇಳಿದರು. ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ಕೊರತೆ ಇದ್ದು, ಅದನ್ನು ನೀಗಿಸುವ ನಿಟ್ಟಿನಲ್ಲಿ ಈ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Exit mobile version