ಬೆಂಗಳೂರು, ಎ. 01: ರಾಜ್ಯ ಸರ್ಕಾರ ಹಾಗೂ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ನಡುವಿನ ಒಳಜಗಳ ತಾರಕಕ್ಕೇರಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ತಮ್ಮ ಇಲಾಖೆಯ ಕೆಲಸಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾನೂನು ಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಸಚಿವ ಈಶ್ವರಪ್ಪ ಆರೋಪಿಸಿದ್ದರು. ಈ ಸಂಬಂಧ ರಾಜ್ಯಪಾಲರು ಹಾಗೂ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ದೆಹಲಿಯ ವರಿಷ್ಠರಿಗೆ ದೂರು ನೀಡಿದ್ದರು.
ಅಲ್ಲದೇ, ಕಳೆದ ಒಂದೂವರೆ ವರ್ಷದಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವನಾಗಿ ಕೆಲಸ ಮಾಡುತ್ತಿರುವ ತಮ್ಮ ಗಮನಕ್ಕೆ ಬಾರದಂತೆ ಯಡಿಯೂರಪ್ಪ ಇಲಾಖೆಯ ಪ್ರಮುಖ ನಿರ್ಧಾರಗಳನ್ನು ತಾವೇ ತೆಗೆದುಕೊಳ್ಳುತ್ತಿದ್ದಾರೆ. ಪಕ್ಷದ ಹಿರಿಯ ಸಚಿವನಾಗಿರುವ ತಮಗೆ ಇದರಿಂದ ನೋವಾಗಿದೆ ಎಂದು ಸಹ ಅಸಮಾಧಾನ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧದ ಅಸಮಾಧಾನ ಮುಂದುವರಿಸಿರುವ ಈಶ್ವರಪ್ಪ, ಮುಖ್ಯಮಂತ್ರಿಗಳ ಅನುದಾನ ಹಂಚಿಕೆಯನ್ನು ತಡೆಹಿಡಿದಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸಿಎಂ ಯಡಿಯೂರಪ್ಪ ಅವರು 65 ಕೋಟಿ. ರೂ. ಅನುದಾನ ನೀಡಿದ್ದರು. ಆದರೆ ಇದೀಗ ಅನುದಾನ ತಡೆ ಹಿಡಿದ ಈಶ್ವರಪ್ಪ, ಮುಖ್ಯಮಂತ್ರಿಗಳ ಮೇಲಿನ ತಮ್ಮ ಆಕ್ರೋಶಕ್ಕೆ ಪರೋಕ್ಷವಾಗಿ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ.
ಇನ್ನೂ, ಸಚಿವ ಈಶ್ವರಪ್ಪ ಮಾಡಿದ ಈ ಆರೋಪ ಬಿಜೆಪಿ ನಾಯಕರ ಜತೆಗೆ ವಿರೋಧ ಪಕ್ಷದ ನಾಯಕರಲ್ಲಿ ಅಚ್ಚರಿ ಮೂಡಿಸಿತ್ತು. ಇದೇ ವಿಷಯದ ಕುರಿತು ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ
ಅವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿದ್ದರು.