ಬೆಲೆ ಏರಿಕೆಯಿಂದ ರೈತರ ಪರಿಸ್ಥಿತಿ ವಿಷಯಗೊಂಡಿದೆ: ಕುಮಾರಸ್ವಾಮಿ ಟೀಕೆ

HDK

ಬೆಂಗಳೂರು, ಮಾ.22: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರ ಹಾಗೂ ರಾಜ್ಯ ಸರ್ಕಾರದ ಏಕಗವಾಕ್ಷಿ ಬಗ್ಗೆ ಟೀಕಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 2022ರ ಹೊತ್ತಿಗೆ ರೈತರ ಆದಾಯ ದ್ವಿಗುಣ ಮಾಡುವುದಾಗಿ ಮೋದಿ ಹೇಳಿದ್ದರು. ಆದರೆ, 2021ರ ವೇಳೆಗೆ ರೈತರ ಕೃಷಿ ಖರ್ಚು, ವೆಚ್ಚ ದುಪ್ಪಟ್ಟಾಗಿದ್ದು, ಜತಗೆ ರಸಗೊಬ್ಬರ ಬೆಲೆ ಏರಿದೆ. ರೈತರು ಬೋರ್‌ವೆಲ್‌ ಕೊರೆಸಲಾಗದಂಥಾ ಪರಿಸ್ಥಿತಿ ಉದ್ಭವವಾಗಿದೆ. ಮತ್ತೊಂದೆಡೆ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯು ಪರಿಸ್ಥಿತಿಯನ್ನು ವಿಷಮಗೊಳಿಸಿದೆ. ಇನ್ನು ಆದಾಯ ದ್ವಿಗುಣ ಎಲ್ಲಿ? ಎಂದು ಪ್ರಶ್ನಿಸಿದ್ದಾರೆ.

ಇವತ್ತಿನ ಲೆಕ್ಕಾಚಾರದ ಪ್ರಕಾರ ರೈತರು ಬೋರ್‌ವೆಲ್ ಕೊರೆಸಬೇಕಿದ್ದರೆ ₹1-2ಲಕ್ಷ ಖರ್ಚು ಮಾಡಬೇಕು. ಪಿವಿಸಿ ಪೈಪ್‌ಗಳ ದರ ದುಪ್ಪಟ್ಟಾಗಿದೆ, ಮೋಟರ್‌ ಬೆಲೆಯಲ್ಲಿ ಜಿಗಿತವಾಗಿದೆ. ಕೃಷಿ ಪಂಪ್‌ ಸೆಟ್‌ಗಳಿಗೆ ರೈತರಾದವರೇ ಶೇ. 18 GST ಪಾವತಿಸಬೇಕಿರುವುದು ವಿಷಾದಕರ. ಇದು ಕೃಷಿಗೆ ಪೂರಕ ಸ್ಥಿತಿಯೇ ಎಂಬುದರ ಅವಲೋಕನೆಯಾಗಬೇಕಿದೆ.

ಕೃಷಿ ಪರಿಕರಗಳ ಬೆಲೆ ಏರಿಕೆ ಬಗ್ಗೆ ರಾಜ್ಯದ ಕೃಷಿ ಸಚಿವರು ನೀಡಿರುವ ಹೇಳಿಕೆ ಇಂತಿದೆ, ‘ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳದಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಹೆಚ್ಚಳಕ್ಕೆ ರೈತರು ಹೊಂದಿಕೊಳ್ಳಬೇಕು ಎಂದಿದ್ದಾರೆ ಅವರು. ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರದ ವಿಚಾರ ಎಂದು ಕಿಡಿಕಾರಿದ್ದಾರೆ.

ಇನ್ನೂ, ಕೃಷಿಯಲ್ಲಿ ಆದಾಯ ಗಳಿಸುವುದು ಇರಲಿ, ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ. ಇದನ್ನು ನಿವಾರಿಸಲಾಗದೇ ಇರುವುದು ರೈತರ ಆದಾಯ ದ್ವಿಗುಣ ಮಾಡುವ ಕ್ರಮವೇ ಎಂಬುದರ ಬಗ್ಗೆ ಮೋದಿ ಉತ್ತರಿಸಬೇಕು. ಪರಿಸ್ಥಿತಿ ಹೀಗಿದ್ದು, ಸಮಾವೇಶದಲ್ಲಿ ರೈತರ ಕಲ್ಯಾಣದ ಬಗ್ಗೆ ಮೋದಿ ಅವರು ಆಡುವ ಮಾತುಗಳು ಪ್ರಾಮಾಣಿಕವೇ? ಎಂದು ಪ್ರಶ್ನೆ ಮಾಡಿರುವ ಎಚ್ಡಿಕೆ, ಪ್ರಧಾನಿ ಮೋದಿ ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಕೇಂದ್ರಿತ ವ್ಯವಸ್ಥೆ ಇದೆ ಎಂದಿದ್ದಾರೆ. ಆದರೆ ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ?ಮೋದಿ ಉತ್ತರಿಸುವರೇ? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ, ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಖುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ ‘ಮಹಾನಾಯಕ-ಏಕಗವಾಕ್ಷಿ’ ಬಗ್ಗೆ ಮೋದಿ ಮಾತಾಡುವರೇ? ಜತೆಗೆ ಕರ್ನಾಟಕದ ಸರ್ಕಾರದಲ್ಲೇ ‘ಏಕಗವಾಕ್ಷಿ’ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತಾ ಬ್ಯಾನರ್ಜಿ ಅವರ ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ, ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ ಎಂದು ಆಗ್ರಹಿಸಿದ್ದಾರೆ.

Exit mobile version