ಗೋವಾ ಆ 31 : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪತ್ರಕರ್ತ ತರುಣ್ ತೇಜ್ ಪಾಲ್ ಅವರನ್ನು ಖುಲಾಸೆಗೊಳಿಸಿರುವುದರ ವಿರುದ್ಧ ಗೋವಾ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ನ ಗೋವಾ ಪೀಠ ಸೆಪ್ಟೆಂಬರ್ 20ಕ್ಕೆ ಮುಂದೂಡಿದೆ.
ತರುಣ್ ತೇಜ್ಪಾಲ್, 2013ರಲ್ಲಿ ಗೋವಾದ ಐಷಾರಾಮಿ ಹೋಟೆಲ್ನ ಲಿಫ್ಟ್ನೊಳಗೆ ಮಹಿಳಾ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಗೋವಾದ ಸೆಷನ್ಸ್ ನ್ಯಾಯಾಲಯ ಮೇ 21ರಂದು ತೇಜ್ಪಾಲ್ ಅವರನ್ನು ಲೈಂಗಿಕ ದೌರ್ಜನ್ಯ ಆರೋಪಗಳಿಂದ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಗೋವಾ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
ಕೋವಿಡ್ –19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ ಈ ಪ್ರಕರಣದ ವಿಚಾರಣೆಯನ್ನು ಆನ್ಲೈನ್ ಮೂಲಕ ನಡೆಸಲಾಗುತ್ತಿತ್ತು. ಇದೇ ಮೊದಲ ಬಾರಿಗೆ ಈ ಪ್ರಕರಣದ ವಿಚಾರಣೆಯನ್ನು ಭೌತಿಕವಾಗಿ ನಡೆಸಲಾಯಿತು.
ಗೋವಾ ಸರ್ಕಾರದ ಮೇಲ್ಮನವಿಯ ವಿಚಾರಣೆಯನ್ನು ಗೌಪ್ಯವಾಗಿ ನಡೆಸುವಂತೆ ತೇಜ್ಪಾಲ್ ಈ ತಿಂಗಳ ಆರಂಭದಲ್ಲಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.