ಬೆಂಗಳೂರು, ಜೂ. 03: ಗೂಗಲ್ನಲ್ಲಿ ಅತಿ ಕೊಳಕು(ugly) ಭಾಷೆ ಎನ್ನುವ ಶೋಧನಾ ಫಲಿತಾಂಶ (ಸರ್ಚ್ ರಿಸಲ್ಟ್) ಬರುತ್ತಿದ್ದ ಬಗ್ಗೆ ಕನ್ನಡಿಗರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಗೂಗಲ್ ಮಾಡಿದ ಪ್ರಮಾದಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭಾಷೆ ವಿಚಾರದಲ್ಲಿ GoogleIndia ಹಾಗೂ Google ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘Ugliest language in India’ ಎಂಬ ಹುಡುಕಾಟಕ್ಕೆ ಕನ್ನಡ ಎಂದು ಉತ್ತರ ನೀಡುತ್ತಿದ್ದ ವೆಬ್ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು Googleಗೆ ಅಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.
ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. ಎಲ್ಲ ಭಾಷೆಗಳೂ ಸುಂದರವೇ. ಭಾಷೆ ಭಾವನೆಗಳಿಗೆ ಸಂಬಂಧಿಸಿದ ವಿಷಯ. ಭಾಷೆ ವಿರುದ್ಧ ನಿಂದನೆ ಬಹಳ ನೋವಿನದ್ದು. ಹೀಗಾಗಿ ಈ ವಿಚಾರದಲ್ಲಿ Google ಸೂಕ್ಷ್ಮವಾಗಿರಬೇಕು. ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್ಪುಟ ಡಿಲಿಟ್ ಆಗಿರಬಹುದು. ಆದರೆ ಅದರಿಂದ ಕನ್ನಡಿಗರಿಗಾದ ನೋವಿಗೇನು ಪರಿಹಾರ?
ಗೂಗಲ್ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡ ಭಾಷೆಯ ವಿಚಾರದಲ್ಲಿ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ,ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ ಎಂದು ಎಚ್ಚರಿಸಿದ್ದಾರೆ.