ಬೆಂಗಳೂರು, ಆ. 13: ರಾಜ್ಯದ್ಯಾಂತ ಕೊರೊನಾ 3ನೇ ಅಲೆ ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ ಮಂದೆ ಬರುತ್ತಿರುವ ಹಬ್ಬಗಳಿಗೆ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.
ಈ ಬಾರಿ ಆಗಸ್ಟ್ ನಿಂದ ಅಕ್ಟೋಬರ್ ವರೆಗೆ ಸಾಲು ಸಾಲು ಹಬ್ಬಗಳಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹಬ್ಬಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ. ಈ ಅವಧಿಯಲ್ಲಿ ಗಣೇಶ ಚತುರ್ಥಿ, ಮೊಹರಂ, ಶ್ರೀ ಕೃಷ್ಣ ಜನ್ಮಾಷ್ಟಮಿ, ನವರಾತ್ರಿ ಸೇರಿದಂತೆ ಹಲವು ಹಬ್ಬಗಳು ಇರುವುದರಿಂದ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ಮಾರ್ಗಸೂಚಿಗಳು
- ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಮತ್ತು ಇತರೆ ಧಾರ್ಮಿಕ ಸ್ಥಳ ಸೇರಿದಂತೆ ಎಲ್ಲ ಪೂಜಾ ಸ್ಥಳಗಳನ್ನು ತೆರೆಯಲು ಕೊವಿಡ್-19 ನಿಯಮಗಳ ಪಾಲನೆ ಅಡಿಯಲ್ಲಿ ಅನುಮತಿ ನೀಡಲಾಗಿದೆ.
- ದೇವಸ್ಥಾನಗಳಲ್ಲಿ ಹಬ್ಬ ಹರಿದಿನ, ಜಾತ್ರೆ, ಮಹೋತ್ಸವ, ಮೆರವಣಿಗೆ, ಸಭೆ ಮತ್ತು ಸಮಾರಂಭಗಳಿಗೆ ಯಾವುದೇ ಅನುಮತಿ ಇರುವುದಿಲ್ಲ.
- ಹಬ್ಬಗಳ ಸಂದರ್ಭದಲ್ಲಿ ಸಭೆ ಸಮಾರಂಭಗಳು ತೀರಾ ಅಗತ್ಯವಾಗಿದ್ದಲ್ಲಿ ಬಿಬಿಎಂಪಿ ಆಯುಕ್ತರು ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಹಿತದೃಷ್ಟಿಯಿಂದ ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ ಆದೇಶಿಸಲಾಗಿದೆ.
- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಈ ಕೊವಿಡ್-19 ಮಾರ್ಗಸೂಚಿಗಳು ಪಾಲನೆ ಆಗುವಂತೆ ನೋಡಿಕೊಳ್ಳತಕ್ಕದ್ದು.
- ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಎಲ್ಲ ರೀತಿಯ ಒಗ್ಗೂಡುವಿಕೆಯ ಸಭೆ ಮತ್ತು ಸಮಾರಂಭಗಳನ್ನು ನಿಷೇಧಿಸಲಾಗಿದೆ.
ಮೊಹರಂಗೆ ಮಾರ್ಗಸೂಚಿ
- ಖಬರಸ್ಥಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗದಲ್ಲಿ ಯಾವುದೇ ತರಹದ ಸಭೆ ಏರ್ಪಡಿಸುವುದನ್ನು ನಿರ್ಬಂಧಿಸಲಾಗಿದೆ. ಖಬರಸ್ಥಾನಗಳಲ್ಲಿ ಕೇವಲ ದಫನ ಮಾಡುವುದಕ್ಕೆ ಮಾತ್ರ ಅನುಮತಿ ನೀಡಲಾಗಿದ್ದು, ಮೊಹರಂಗೆ ಸಂಬಂಧಿಸಿದ ಆಚರಣೆಗಳಿಗೆ ಅನುಮತಿ ಇರುವುದಿಲ್ಲ.
- ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು
- 60 ವರ್ಷ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುವುದು.
- ಸಾಮಾಜಿಕ ಅಂತರ ಕಾಪಡಿಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.