ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ ಮುಗಿಸುವ ಹಗಲು ಕನಸಿದೆ – ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು ಡಿ 3 : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಬಗ್ಗೆ ಲಘುವಾಗಿ ಟೀಕಿಸಿದ್ದ ಸಿದ್ದರಾಮಯ್ಯ ಹೇಳಿಕೆ ವಿರುದ್ದ ಪ್ರತಿಕ್ರಿಯಿಸಿರುವ ಹೆಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಸಂಸತ್ ಕಲಾಪಕ್ಕೆ ತೆರಳಿದ್ದ ಎಚ್.ಡಿ.ದೇವೇಗೌಡರು ಅಲ್ಲಿಯೇ ಇದ್ದ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಆ ಭೇಟಿ ರಾಜಕೀಯ, ಸಂಕುಚಿತತೆಯ ಎಲ್ಲೆ ಮೀರಿದ್ದು ಎನ್ನುವುದನ್ನು ಆ ಇಬ್ಬರು ನಾಯಕರ ಭೇಟಿಯ ಚಿತ್ರಗಳೇ ಹೇಳುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ, ಅಸೂಯೆ, ದ್ವೇಷ, ಅಸಹನೆ, ಸರ್ವಾಧಿಕಾರಿ ಮನೋಭಾವದ ಸಿದ್ಧಕಲೆ’ಯ ನಿಪುಣನಿಗೆ ರಾಜಕೀಯದಲ್ಲಿ ವಿರಳಾತಿ ವಿರಳವಾಗಿ ಕಾಣುವ ಇಂಥ ಭೇಟಿಗಳನ್ನು ಅರಗಿಸಿಕೊಳ್ಳುವುದು ಹೇಗೆ ತಾನೇ ಸಾಧ್ಯ?. ರಾಜಕೀಯ ರಕ್ಕಸತನ’ಕ್ಕೆ ಅವರು ರಾಜಾಧಿರಾಜ, ‘ರಾಜಕೀಯ ಆಶ್ರಯ ನೀಡಿದ ಕಾಂಗ್ರೆಸ್ ಪಕ್ಷವನ್ನೇ ಹೆಬ್ಬಾವಿನಂತೆ ನುಂಗಲು ಹೊರಟ ಸಿದ್ಧಸೂತ್ರಧಾರನಿಗೆ ರಾಜಕೀಯ ಬದುಕು ಕೊಟ್ಟು ಬೆಳೆಸಿದ ಜೆಡಿಎಸ್ ಪಕ್ಷವನ್ನು ಮುಳುಗಿಸಿಬಿಡುವ ಹಗಲುಕನಸು ಬೇರೆ ಇದೆ ಎಂದು ಟೀಕೆ ಮಾಡಿದ್ದಾರೆ.

ದೇವೇಗೌಡರು ಅವಕಾಶವಾದಿ ರಾಜಕಾರಣಿ ಎನ್ನುವ ಆ ನಾಲಗೆ, ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎನ್ನುವ ಆ ನಾಲಗೆಯ ಮೇಲೆ ಪಕ್ಷನಿಷ್ಠೆ’ ಎನ್ನುವ ಪದ ಎಂದಾದರೂ ಬಂದಿದೆಯಾ? ಅದಕ್ಕೆ ಆ ಪದ ಪರಮ ಅಪಥ್ಯ’ ಎನ್ನುವುದು ಇಡೀ ರಾಜ್ಯದ ಜನರಿಗೆ ಗೊತ್ತು. ನನಗಿಲ್ಲದಿದ್ದರೆ ಯಾರಿಗೂ ಬೇಡ ಎನ್ನುವ ಸ್ವಾರ್ಥ ಮನೋಭಾವದಿಂದ ಸ್ವಪಕ್ಷವೂ ಇದ್ದ ಮೈತ್ರಿ ಸರಕಾರವನ್ನೇ ಸ್ವಾಹಾ ಮಾಡಿ ಆಪರೇಷನ್ ಕಮಲದ ಕೆಸರಿನಲ್ಲಿ ವಿಕೃತವಾಗಿ ಹೊರಳಾಡಿದವರು ಯಾರು ಎನ್ನುವುದು ಅವರ ಸ್ವಪಕ್ಷೀಯರಿಗೇ ಚೆನ್ನಾಗಿ ಗೊತ್ತು ಎಂದು ಕುಟುಕಿದ್ದಾರೆ.

ನಾಯಕರಿಗೆ ಗತಿ ಇಲ್ಲ, ಅಭ್ಯರ್ಥಿಗಳಿಗಂತೂ ದಟ್ಟ ದಾರಿದ್ರ. ಇನ್ನು, ಪಕ್ಷದ ಬಗ್ಗೆ ಹೇಳುವುದೇ ಬೇಡ. ಅಧ್ಯಕ್ಷರಿಗೊಂದು ಕಾಂಗ್ರೆಸ್, ಪ್ರತಿಪಕ್ಷ ನಾಯಕರಿಗೊಂದು ಕಾಂಗ್ರೆಸ್. ಅಷ್ಟೇ ಅಲ್ಲ: ಜಿಲ್ಲೆಗಳಲ್ಲಿ ಎರಡೆರಡು ಕಾಂಗ್ರೆಸ್’ಗಳು!! ‘ಸಿದ್ಧಸೂತ್ರದಾರ’ನಿಗೆ ಇದೆಲ್ಲ ಗೊತ್ತಿಲ್ಲವೇ? ಬಾಯಲ್ಲಿ ಜಾತ್ಯತೀತೆಯ ಜಪ ಮಾಡುತ್ತಲೇ ‘ಸಂದೇಶ ಸನ್ನಿಧಿ’ಯಲ್ಲಿ ‘ಸಿದ್ಧಸೂತ್ರ ಹೆಣೆದ ರಕ್ಕಸ ರಾಜಕಾರಣಕ್ಕೆ ಕೊನೆಗಾಲ ಬಂದಿದೆ. ಆ ದಿನವೂ ಹತ್ತಿರದಲ್ಲೇ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.

Exit mobile version