Hassan: ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಎಲ್ಲ ಪಕ್ಷಗಳ ನಡುವಿನ ತಿಕ್ಕಾಟ ಗರಿಗೆದರಿದ್ದು ಜೆಡಿಎಸ್ (JDS) ನಲ್ಲೆ ಬೆಳೆದು ಮತ್ತೆ ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಕರೆ ಕೊಡುವ ಸಿ.ಎಂ ಸಿದ್ದರಾಮಯ್ಯ ಅವರ ದುರಹಂಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲೆ ತಕ್ಕ ಉತ್ತರ ನೀಡುತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (H.D. Devegowda) ಕರೆ ಕೊಟ್ಟಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲೇ ಬೆಳೆದು ಈಗ ಅಧಿಕಾರದ ಅಹಂ ನಿಂದಾಗಿ ಬಾಯಿಗೆ ಬಂದಂತೆ ಮಾತನಾಡುವ ಜೊತೆಗೆ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಸೋಲಿಸಲು ಹಾಸನಕ್ಕೆ ಮೂರು ಬಾರಿ ಬಂದು ಪ್ರಜ್ವಲ್ ಸೋಲಿಸಲು ಮುಂದಾಗಿರುವ ಕಾಂಗ್ರೆಸ್ (Congress) ನಾಯಕರಿಗೆ ಈ ಬಾರಿ ಮುಖಭಂಗ ಮಾಡುವ ಕೆಲಸವನ್ನು ನನ್ನ ಜಿಲ್ಲೆಯ ಜನರು ಮಾಡಬೇಕಿದೆ ಎಂದು ಕಿಡಿ ಕಾರಿದ್ದಾರೆ.
ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಸಲುವಾಗಿ ಕೇಂದ್ರ ಹಣ ನೀಡುತ್ತಿಲ್ಲ ಎಂದು ಕೋರ್ಟ್ನಲ್ಲಿ ರಾಜ್ಯ ಸರ್ಕಾರ ಧಾವೆ ಹೂಡಿದೆ, ಪ್ರಬಲವಾದ ಪ್ರಧಾನಿ ದೇಶಕ್ಕೆ ಇರಬಾರದು ಎಂಬ ಹೇಳಿಕೆ ನೀಡಿದ್ದಾರೆ. ಪ್ರಬಲವಾದ ಪ್ರಧಾನಮಂತ್ರಿ ಇದ್ದರೆ ಇವರು ಕೇಳಿದಂತೆ ಹಣ ನೀಡುವುದಿಲ್ಲ ಎಂದು ಈ ರೀತಿ ಹೇಳಿದ್ದಾರೆ. ಈ ಬಗ್ಗೆ ಜನ ಯೋಚಿಸುವ ಅಗತ್ಯವಿದೆ ನಾನು ಬದುಕಿರುವ ತನಕ ಜೆಡಿಎಸ್ ಪಕ್ಷ ಮುಚ್ಚಲು ಯಾರಿಂದಲೂ ಸಾಧ್ಯವಿಲ್ಲ.
ಜೆಡಿಎಸ್ ಎಲ್ಲಿದೆ ಎಂದು ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೇಳಿದ್ದಾರೆ. ಅವರಿಗೆ ಜೆಡಿಎಸ್ ಎಲ್ಲಿದೆ ಎಂಬುದನ್ನು ತೋರಿಸುತ್ತೇನೆ, ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಂಡು ತಮ್ಮ ಬಳಿ ಹಣ ಇಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಧಾವೆ ಹೂಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.ಈ ಭಾಗದ ಎಲ್ಲರೂ ಈ ಬಾರಿ ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಗೆ ಮತ ನೀಡುವ ಮೂಲಕ ಅಧಿಕ ಮತಗಳ ಹಂತರದಿಂದ ಗೆಲ್ಲಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದ್ದಾರೆ.