ಪ್ರವೀಣ್ ನೆಟ್ಟಾರು ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಹೆಚ್‌.ಡಿ.ಕೆ

ಮಂಗಳೂರು : ಬಿಜೆಪಿ(BJP) ಯುವಮುಖಂಡ ಪ್ರವೀಣ್ ಕುಮಾರ ನೆಟ್ಟಾರು(Praveen Nettaru) ಮನೆಗೆ ಜೆಡಿಎಸ್‌ ನಾಯಕ(JDS Leader) ಹೆಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಐದು ಲಕ್ಷ ರೂಪಾಯಿ ಪರಿಹಾರ ನೀಡಿದರು.
ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಕಾಟಾಚಾರಕ್ಕೆ ತನಿಖೆ ಮಾಡಬಾರದು. ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷ ನೀಡಬೇಕು.

ಪ್ರವೀಣ ಕುಮಾರ್ ನೆಟ್ಟಾರು ಅವರ ಕುಟುಂಬದ ಆಶಯವು ಇದೆ ಆಗಿದೆ. ಇನ್ನು ಅವರ ಕುಟುಂಬ ಸಾಕಷ್ಟು ಸಂಕಷ್ಟದಲ್ಲಿದೆ. ವಿಧವೆ ತಂಗಿಯನ್ನು ಸಾಕುವ ಜವಾಬ್ದಾರಿ ಇದೆ. ಅವರ ಕುಟುಂಬ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ನನ್ನ ಮೊಬೈಲ್ ನಂಬರ್ ನೀಡಿದ್ದೇನೆ. ಯಾವುದೇ ಸಮಸ್ಯೆಯಾದರೆ ನೇರವಾಗಿ ನನಗೆ ಕರೆ ಮಾಡಿ ಮಾತನಾಡಬಹುದು ಎಂದು ತಿಳಿಸಿದ್ದೇನೆ. ಮತ್ತೆ ಆರ್ಥಿಕ ನೆರವು ನೀಡುತ್ತೇವೆ ಎಂದು ಭರವಸೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.


ಇನ್ನು ರಾಜ್ಯ ಬಿಜೆಪಿ ಸರ್ಕಾರ(State BJP Government) ಪ್ರವೀಣ ನೆಟ್ಟಾರು ಹತ್ಯೆಯ ಜವಾಬ್ದಾರಿ ನಿರ್ವಹಿಸಲು ಆಗದೆ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಿದೆ. ರಾಜ್ಯ ಸರ್ಕಾರ ಈ ವಿಚಾರದಲ್ಲಿ ಬೇಜವಾಬ್ದಾರಿ ತೀರ್ಮಾನ ತೆಗೆದುಕೊಂಡಿದೆ. ರಾಜ್ಯದ ಪೊಲೀಸರ ಮನೋಸ್ಥೈರ್ಯ ಕುಗ್ಗಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ರಾಜ್ಯದ ಪೊಲೀಸ್ ಇಲಾಖೆಯಲ್ಲಿಯೂ ಅದೆಷ್ಟೋ ದಕ್ಷ ಅಧಿಕಾರಿಗಳಿದ್ದಾರೆ ಅವರಿಗೆ ಜವಾಬ್ದಾರಿ ನೀಡಿದ್ದರೆ, ಪ್ರಕರಣವನ್ನು ಭೇದಿಸುತ್ತಿದ್ದರು ಎಂದು ಸರ್ಕಾರದ ನಡೆಯನ್ನು ಟೀಕಿಸಿದರು.


ರಾಜ್ಯದಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳು ಇಲ್ಲವೆ? ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟರೆ ಕರಾವಳಿ ಹಿಂಸಾಕಾಂಡವನ್ನು ಮೂಲೋತ್ಪಾಟನೆ ಮಾಡಬಲ್ಲರು. ರಾಜ್ಯ ಸರಕಾರಕ್ಕೆ ಅದು ಬೇಕಿಲ್ಲ. ಸಮರ್ಥ ಅಧಿಕಾರಿಗಳನ್ನು ನಂಬದೆ ಎನ್‌ಐಎಗೆ(NIA) ವಹಿಸುವ ನಾಟಕವಾಡಿ ಕಗ್ಗೊಲೆಗಳ ತನಿಖೆಗೆ ‘ಸಮಾಧಿʼ ಕಟ್ಟಲು ಹೊರಟಿದೆ. ಎನ್‌ಐಎಗೆ ತನಿಖೆಗೆ ವಹಿಸಿದ ಎಷ್ಟು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ? ಒಂದೂ ಇಲ್ಲ. ಎನ್‌ಐಎಗೆ ಒಪ್ಪಿಸಿದ ಮೇಲೆ ತನಿಖೆಯಲ್ಲಿ ಮುಂದೆ ಸಾಗುತ್ತಿದ್ದ ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿಗಳು ಕೊಟ್ಟ ಸಂದೇಶವೇನು?

ಸ್ವತಃ ಗೃಹ ಸಚಿವರಾಗಿದ್ದ ಅವರು, ಸಿಎಂ ಆದ ಮೇಲೆ ತಮ್ಮ ಅಧೀನದ ಪೊಲೀಸ್ ವ್ಯವಸ್ಥೆಯನ್ನೇ ನಂಬುತ್ತಿಲ್ಲ. ಇದಲ್ಲವೇ ವಿಪರ್ಯಾಸ ಎಂದು ಕುಮಾರಸ್ವಾಮಿ ಅವರು ಲೇವಡಿ ಮಾಡಿದ್ದರು.

Exit mobile version