ಕಾಂಗ್ರೆಸ್ ಸರಕಾರ ‘ಕರ್ನಾಟಕವನ್ನು ಕುಡುಕರ ತೋಟ’ವನ್ನಾಗಿ ಮಾಡಲಿದೆ – ಎಚ್ಡಿಕೆ ಲೇವಡಿ

ಕರ್ನಾಟಕ (Karnataka) ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ (IT-BT) ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು. ಕಾರಣವಿಷ್ಟೇ; ಕಾಂಗ್ರೆಸ್ (Congress) ಸರಕಾರ ‘ಕರ್ನಾಟಕವನ್ನು ಕುಡುಕರ ತೋಟ’ವನ್ನಾಗಿ ಮಾಡಲಿದೆ. ಚುನಾವಣೆಗೆ ಮುನ್ನ ‘ಸರ್ವಜನಾಂಗದ ಶಾಂತಿಯ ತೋಟ’ ಎನ್ನುತ್ತಿದ್ದರು, ಗೆದ್ದ ನಂತರ ‘ಕರ್ನಾಟಕ ಕುಡುಕರ ತೋಟ’ ಎನ್ನುತ್ತಿದ್ದಾರೆ. ಇದು ರಾಜ್ಯ ಕಾಂಗ್ರೆಸ್ ಸರಕಾರದ ಸಂಕಲ್ಪ ಎಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ (H D Kumaraswamy) ಅವರು ರಾಜ್ಯ ಸರ್ಕಾರವನ್ನು ಲೇವಡಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರಕಾರದ್ದು. ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದ್ಹೇಳಿ, ಈಗ ಮನೆಮನೆಗೂ ‘ಮದ್ಯಭಾಗ್ಯ’ ನೀಡಲು ಹೊರಟಿದೆ. ಸರಕಾರವು ಧನಪಿಶಾಚಿ ಅವತಾರವೆತ್ತಿ ಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ.

ಕೊಟ್ಟ ಗ್ಯಾರಂಟಿಗಳಿಂದ ಜನರನ್ನು ಯಾಮಾರಿಸಿದ್ದು ಸಾಲದೆಂಬಂತೆ ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸಿರುವುದು ನಾಚಿಕೆಗೇಡು ಅಕ್ಕಿ, ಬೇಳೆ, ದವಸಧಾನ್ಯ, ಹಣ್ಣು ತರಕಾರಿ, ಹಾಲು-ಮೊಸರು ಸಿಗುವ ಸೂಪರ್ ಮಾರುಕಟ್ಟೆಗಳಲ್ಲೂ ಮುಕ್ತವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದು ಅಸಹ್ಯದ ಪರಮಾವಧಿ. ಇದಾ ಸಮಾಜವಾದವೇ..? ಎಂದು ಪ್ರಶ್ನಿಸಿದ್ದಾರೆ.

3,000 ಜನಸಂಖ್ಯೆಯುಳ್ಳ ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರ್ (Bar) ತೆಗೆದು ಮನೆಹಾಳು ಮಾಡಲಿದೆ ಸರಕಾರ. ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಮಹಿಳೆಯರಿಗೆ ಕರ್ನಾಟಕದಲ್ಲಿ ಕೇಡುಗಾಲ ಶುರುವಾಗಿದೆ. ಅವರ ಸೌಭಾಗ್ಯಕ್ಕೆ ಎದುರಾಗಿದೆ ಸಂಚಕಾರ. ಇದು ಮನೆಹಾಳು ಸರಕಾರ. ನಾರಿಯರಿಗೆ ‘ಶಕ್ತಿ’ ತುಂಬುತ್ತೇವೆ ಎಂದ ಸರಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ. ‘ಗೃಹಲಕ್ಷ್ಮೀ’ (Gruhalakshmi) ಎಂದ ಸರ್ಕಾರ ಅವರ ಬಾಳಿಗೆ ಗ್ರಹಣವಾಗಿದೆ. ‘ಗೃಹಜ್ಯೋತಿ’ ಎಂದ ಸರಕಾರ ಅವರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ. ‘ಅನ್ನಭಾಗ್ಯ’ ಎಂದ ಸರಕಾರ, ಈಗ ‘ಮದ್ಯಭಾಗ್ಯ’ ಎನ್ನುತ್ತಿದೆ ಎಂದು ಟೀಕಿ ಪ್ರಹಾರ ನಡೆಸಿದ್ದಾರೆ.

Exit mobile version