ಎಚ್ಡಿಕೆ vs ಸುಮಲತಾ ಟಾಕ್ ವಾರ್: ಮಧ್ಯಪ್ರವೇಶಿಸಿದ ರಾಕ್​ಲೈನ್ ವೆಂಕಟೇಶ್ ನಿವಾಸಕ್ಕೆ ಮುತ್ತಿಗೆ ಹಾಕಲು ಜೆಡಿಎಸ್ ಕಾರ್ಯಕರ್ತರ ಯತ್ನ, ಬಂಧನ

ಬೆಂಗಳೂರು, ಜು. 10: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ‌ ಸುಮಲತಾ ಅಂಬರೀಶ್ ನಡುವಿನ‌ ವಾಕ್ ಸಮರದಲ್ಲಿ ಮಧ್ಯ ಪ್ರವೇಶಿಸಿರುವ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್, ಜೆಡಿಎಸ್ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇಬ್ಬರು ಜನಪ್ರತಿನಿಧಿಗಳ ಮಾತಿನ ವಿವಾದದಲ್ಲಿ ಮಧ್ಯ ಪ್ರವೇಶಿಸಿರುವ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಕುರಿತು ರಾಕ್​ಲೈನ್ ವೆಂಕಟೇಶ್ ಹೇಳಿಕೆ ನೀಡಿರುವುದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಜೆಡಿಎಸ್ ಕಾರ್ಯಕರ್ತರು ಶನಿವಾರ ಬೆಳಗ್ಗೆ ರಾಕ್​ಲೈನ್ ವೆಂಕಟೇಶ್ ಅವರ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ರಾಕ್‌ಲೈನ್‌ ವೆಂಕಟೇಶ್‌ ವಾಗ್ದಾಳಿ ನಡೆಸಿರುವುದನ್ನು ಖಂಡಿಸಿ,
ರಾಕ್‌ಲೈನ್ ನಿವಾಸದ ಎದುರು ಜಮಾಯಿಸಿದ ತೆನೆ ಕಾರ್ಯಕರ್ತರು, ವಿವಿಧ ಘೋಷಣೆಗಳನ್ನು ಕೂಗುವ ಮೂಲಕ ರಾಕ್‌ಲೈನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ, ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಕ್ಷಮಾಪಣೆ ಕೇಳುವಂತೆ ಆಗ್ರಹಿಸಿದ್ದ ಜೆಡಿಎಸ್ ಕಾರ್ಯಕರ್ತರು, ಈ ವೇಳೆ ರಾಕ್‌ಲೈನ್ ವೆಂಕಟೇಶ್ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು, ಪ್ರತಿಭಟನಾನಿರತ ಜೆಡಿಎಸ್ ಕಾರ್ಯಕರ್ತರನ್ನು ತಡೆದರು. ಪರಿಣಾಮ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ಕೈಮೀರುವ ಮುನ್ನವೇ ಕ್ರಮಕ್ಕೆ ಮುಂದಾದ ಪೊಲೀಸರು, ರಾಕ್‌ಲೈನ್ ವೆಂಕಟೇಶ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನ ನಡೆಸಿದ ಜೆಡಿಎಸ್ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

Exit mobile version