- ಕರಾವಳಿ-ಮಲೆನಾಡು ತೀವ್ರ ಮಳೆ ಎಚ್ಚರಿಕೆ: 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
- ಬೆಂಗಳೂರಿಗೂ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
- ಮುಂದಿನ 48 ಗಂಟೆಗಳಲ್ಲಿ ಹಲವೆಡೆ ಭಾರೀ ಮಳೆ ಸಾಧ್ಯತೆ
ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರಿಯುವ ಲಕ್ಷಣಗಳು ಕಂಡುಬಂದಿದ್ದು, ಹವಾಮಾನ ಇಲಾಖೆ ಹೊಸ ಮುನ್ಸೂಚನೆ ಬಿಡುಗಡೆ ಮಾಡಿದೆ. (heavy rain in karnataka)
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲ ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) , ಉಳಿದ 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.

ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಕರಾವಳಿ ಭಾಗಗಳಲ್ಲಿ ವರುಣ ಪ್ರಬಲವಾಗಿ ಆರ್ಭಟಿಸುವ ನಿರೀಕ್ಷೆ ಇದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಈ ಬಾರಿ ಆರೆಂಜ್ ಅಲರ್ಟ್ ವ್ಯಾಪ್ತಿಗೆ ಬಂದಿವೆ. (heavy rain in karnataka)
ಈ ಭಾಗಗಳಲ್ಲಿ ಮುಂದಿನ 24 ಗಂಟೆಗಳೊಳಗೆ ಭಾರೀ ಮಳೆ ಹಾಗೂ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ. ತಲುಪುವ ಸಾಧ್ಯತೆ ಇದೆ.
ಮುನ್ನೆಚ್ಚರಿಕಾ ಕ್ರಮವಾಗಿ ಸಮುದ್ರಕ್ಕೆ ಹೋಗದಂತೆ ಮೀನುಗಾರರಿಗೆ ಸೂಚಿಸಲಾಗಿದೆ.
ಇನ್ನು ಕರಾವಳಿ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದೆ.
ನದಿಗಳ ನೀರಿನ ಮಟ್ಟವೂ ಏರಿಕೆಯಾಗಿದ್ದು, ಕೆಲವು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಭೀತಿ ವ್ಯಕ್ತವಾಗಿದೆ.
ಹವಾಮಾನ ಇಲಾಖೆ ನಾಗರಿಕರಿಗೆ ಎಚ್ಚರಿಕೆ ನೀಡಿದ್ದು, ಅನಾವಶ್ಯಕ ಪ್ರಯಾಣವನ್ನು ತಪ್ಪಿಸಲು ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸಲು ಸಲಹೆ ನೀಡಿದೆ.
ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಾದ ಚಿತ್ರದುರ್ಗ (Chitradurga) , ದಾವಣಗೆರೆ, ಬಳ್ಳಾರಿ, ವಿಜಯನಗರ (Vijayanagara) ಸೇರಿದಂತೆ ಹಲವೆಡೆಗಳಲ್ಲಿ ಗುಡುಗು, ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ಈ ಭಾಗಗಳಲ್ಲಿ ಗಾಳಿಯ ವೇಗ ಗಂಟೆಗೆ 30ರಿಂದ 40 ಕಿ.ಮೀ. ಇರಲಿದ್ದು, ವಿದ್ಯುತ್ ಕಂಬಗಳು ಹಾಗೂ ಮರಗಳು ಉರುಳುವ ಸಂಭವವಿದೆ.
ಹವಾಮಾನ ಇಲಾಖೆ ಜನರಿಗೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ತಿಳಿಸಿದೆ.
ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸಂಜೆ ವೇಳೆಗೆ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಸಂಜೆ 5ರಿಂದ ರಾತ್ರಿ 8ರೊಳಗೆ ವರುಣ ದರ್ಶನ ನೀಡುವ ಸಾಧ್ಯತೆಯಿದ್ದು, ಬೆಳಗ್ಗೆ ಮತ್ತು ಮಧ್ಯಾಹ್ನ ಮೋಡ ಕವಿದ ವಾತಾವರಣ ಮುಂದುವರಿಯುವ ನಿರೀಕ್ಷೆ ಇದೆ.
ನಗರದಲ್ಲಿ ಗಾಳಿಯ ವೇಗ ಗಂಟೆಗೆ 14 ರಿಂದ 24 ಕಿ.ಮೀ. ಇರಲಿದೆ ಎಂದು ಇಲಾಖೆ ಅಂದಾಜಿಸಿದೆ. ಬೆಂಗಳೂರಿನ ಗರಿಷ್ಠ ಉಷ್ಣಾಂಶ 26.5 ಡಿಗ್ರಿ ಸೆಲ್ಸಿಯಸ್ (Degrees Celsius) , ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಅಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲೂ ಮಳೆ ತೀವ್ರತೆ ಹೆಚ್ಚಾಗುವ ಲಕ್ಷಣವಿದೆ.
ಈ ಭಾಗಗಳಲ್ಲಿ ಬೆಟ್ಟಗುಡ್ಡ ಪ್ರದೇಶಗಳಲ್ಲಿ ಮಣ್ಣು ಜಾರುವ ಅಪಾಯ ಇರುವ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ಎಚ್ಚರಿಕೆಯಲ್ಲಿದೆ.
ಪ್ರವಾಸಿಗರು ಹಾಗೂ ಸ್ಥಳೀಯರು ನದಿತೀರ ಅಥವಾ ಬೆಟ್ಟ ಪ್ರದೇಶಗಳಿಗೆ ತೆರಳದಂತೆ ಇಲಾಖೆ ಸೂಚನೆ ನೀಡಿದೆ.
ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ.
ಅಷ್ಟೇ ಅಲ್ಲದೆ, ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಬಾಗಲಕೋಟೆ, ರಾಯಚೂರು, ಯಾದಗಿರಿ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲೂ ಭಾರೀ ಮಳೆಯ ಸಾಧ್ಯತೆಯಿದೆ.
ಇಲ್ಲಿ ಸಹ ಬಿರುಗಾಳಿಯ ವೇಗ ಗಂಟೆಗೆ 40 ಕಿ.ಮೀ. ತಲುಪಬಹುದು ಎಂದು ಅಂದಾಜಿಸಲಾಗಿದೆ.
ಬೀದರ್, ಹಾವೇರಿ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.