ಬೆಂಗಳೂರು ಫೆ 7 : ಹಿಜಾಬ್ ವಿವಾದ ರಾಜ್ಯಾದ್ಯಂತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ ಹಿಜಾಬ್ ವಿಚಾರದ ಬಗ್ಗೆ ಮಂಗಳವಾರ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸಲ್ಲಿಸಿರುವ ಎರಡು ಪತ್ಯೇಕ ಅರ್ಜಿಗಳ ವಿಚಾರಣೆಯು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ನಡೆಸಲಿದೆ.
ಈ ಮಧ್ಯೆ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರ ಸಂಹಿತೆ ಕುರಿತು ರಾಜ್ಯ ಸರ್ಕಾರ ಜ.ಫೆ.5ರಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸಹ ಇಂದು ನಡೆಸುವ ಸಾಧ್ಯತೆ ಇದೆ.
ರಾಜ್ಯದ ಉದ್ದಗಲಕ್ಕೂ ಹಬ್ಬಿದ ಹಿಜಾಬ್ ವಿವಾದ :
ಚಿಕ್ಕಮಗಳೂರಿನಲ್ಲಿ ಸೋಮವಾರ ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳಿಗೆ ಅವಕಾಶವನ್ನು ಕಾಲೇಜು ಆಡಳಿತ ಮಂಡಳಿ ನಿರಾಕರಿಸಿದ ಹಿನ್ನೆಲೆಯಲ್ಲಿ ಕೂಡಲೇ ಆಕ್ರೋಶಗೊಂಡ ವಿದ್ಯಾರ್ಥಿಗಳು ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾದರು. ಈ ವೇಳೆ ಇಕ್ಕಟ್ಟಿಗೆ ಸಿಲುಕಿದ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಧರಿಸಿ ಕಾಲೇಜಿನ ಒಳಗೆ ಬಂದು ತರಗತಿಗಳಿಗೆ ಹಾಜರಾಗಲು ಅವಕಾಶವನ್ನು ಮಾಡಿಕೊಡಲಾಯಿತು. ಈ ವೇಳೆ ಬಹುಜನ ವಿದ್ಯಾರ್ಥಿ ಪರಿಷತ್ ಸಂಘಟನೆಯ ವಿದ್ಯಾರ್ಥಿಗಳು ಹಿಜಾಬ್ ಬೆಂಬಲಿಸಿ ನೀಲಿ ಶಾಲು ಧರಿಸಿ ಕಾಲೇಜಿಗೆ ಪ್ರವೇಶಿಸಿದರು.
ಹಿಜಾಬ್ ನಮಗೆ ಮುಖ್ಯ : ಹಿಜಾಬ್ ನಮಗೆ ಬಹುಮುಖ್ಯ, ಅನಾದಿ ಕಾಲದಿಂದಲೂ ಈ ಸಂಸ್ಕೃತಿ ನಮ್ಮಲ್ಲಿ ಇದೆ. ಇದರಿಂದ ಯಾರಿಗೂ ತೊಂದರೆಯಾಗಿಲ್ಲ ಹಿಜಾಬ್ ಧರಿಸುವುದರಿಂದ ನಮಗೆ ರಕ್ಷಣೆ ಸಿಗುತ್ತದೆ. ಈಗ ಏಕಾಏಕಿ ಹಿಜಾಬ್ ತಗೆಯಲು ಸಾಧ್ಯವಿಲ್ಲ. ಪರೀಕ್ಷೆ ವೇಳೆ ಈ ವಿವಾದ ಅವಶ್ಯ ಇಲ್ಲ ಕಾಲೇಜುಗಳು ಆರಂಭವಾಗಬೇಕು ಎಂಬುದು ಮುಸ್ಲಿಂ ವಿದ್ಯಾರ್ಥಿನಿಯ ಆಶಯವಾಗಿದೆ
ಕೆಲವು ಸಂಘಟನೆಗಳ ಕೈವಾಡವಿದೆ : ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿ ಕೆಲವು ಸಂಘಟನೆಗಳು ವಿದ್ಯಾರ್ಥಿನಿಯರನ್ನು ಪ್ರೇರೇಪಿಸುತ್ತಿವೆ, . ಈ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೊಮ್ಮನಾಯಕನಹಳ್ಳಿಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ
ಬಾಗಲಕೋಟೆ ಮತ್ತು ಶಿವಮೊಗ್ಗದಲ್ಲಿ ಕಲ್ಲು ತೂರಾಟ : ಹಿಜಾಬ್ ವಿವಾದ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಪರಸ್ಪರ ವಿವಾದವಾಗಿ ಕಲ್ಲು ತೂರಾಟ ಕೂಡ ನಡೆದಿದೆ.