ನವದೆಹಲಿ, ಜ. 02: ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ, ಕೇಂದ್ರ ಗ್ರಹ ಸಚಿವ ಬೂಟಾ ಸಿಂಗ್ ಅವರು ತಮ್ಮ 86ನೇ ವಯಸ್ಸಿನಲ್ಲಿ ಇಂದು ಬೆಳಿಗ್ಗೆ 5.30ರ ಸುಮಾರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದು ಅಕ್ಟೋಬರ್ ತಿಂಗಳಿಂದಲೂ ಕೋಮಾದಲ್ಲಿದ್ದರು.
ಬೂಟಾ ಸಿಂಗ್ ಅವರು ರಾಜಸ್ಥಾನದ ಹಿರಿಯ ಕಾಂಗ್ರೆಸ್ ಮುಖಂಡ. ಅಲ್ಲದೇ ಜಲೂರ್, ಸಿರೋಹಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗೆ ಆಯ್ಕೆಯಾಗಿದ್ದರು. 1986ರಿಂದ 1989ರವರೆಗೆ ರಾಜೀವ್ ಗಾಂಧಿ ಸರ್ಕಾರದಲ್ಲಿ ದೇಶದ ಗ್ರಹ ಸಚಿವರಾಗಿ ಹಾಗೂ ಪರಿಶಿಷ್ಟ ಜಾತಿ ಆಯೋಗದ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1962ರಿಂದ 2004ರ ನಡುವಿನ ಅವಧಿಯಲ್ಲಿ ಎಂಟು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಬೂಟಾ ಸಿಂಗ್ ಕೇಂದ್ರದಲ್ಲಿ ಗೃಹ ಮತ್ತು ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ಪಿ.ವಿ.ನರಸಿಂಹರಾವ್ ಆಡಳಿತದಲ್ಲಿ ಸಚಿವರಾಗಿದ್ದ ಅವರು 2004ರಿಂದ 2006ರವರೆಗೆ ಬಿಹಾರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದಾರೆ. ಕಾಂಗ್ರೆಸ್ನ ಪ್ರಮುಖ ದಲಿತ ನಾಯಕರಲ್ಲಿ ಒಬ್ಬರಾಗಿದ್ದ ಬೂಟಾ ಸಿಂಗ್ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಬೂಟಾ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ‘ಅನುಭವಿ ಆಡಳಿತಗಾರರಾಗಿದ್ದ ಬೂಟಾ ಸಿಂಗ್ ಅವರು ಬಡವರ ಹಾಗೂ ದೀನ-ದಲಿತರ ಗಟ್ಟಿ ಧ್ವನಿಯಾಗಿದ್ದರು. ಅವರು ತೀರಿಕೊಂಡಿದ್ದಕ್ಕೆ ನನಗೆ ದುಃಖವಾಗಿದೆ. ಅವರ ಕುಟುಂಬ ಸದಸ್ಯರು ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
‘ಬೂಟಾ ಸಿಂಗ್ ಅವರ ಸಾವಿನೊಂದಿಗೆ ದೇಶವು ನಿಷ್ಠಾವಂತ ನಾಯಕ ಮತ್ತು ಸಾರ್ವಜನಿಕ ಸೇವಕರೊಬ್ಬರನ್ನು ಕಳೆದುಕೊಂಡಿದೆ. ಅವರು ತಮ್ಮ ಇಡೀ ಜೀವನವನ್ನು ದೇಶದ ಸೇವೆ ಮತ್ತು ಜನರ ಯೋಗಕ್ಷೇಮಕ್ಕಾಗಿ ಮುಡಿಪಾಗಿಟ್ಟಿದ್ದರು. ಅದಕ್ಕಾಗಿ ಅವರನ್ನು ಯಾವಾಗಲೂ ಸ್ಮರಿಸಲಾಗುವುದು. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು’ ಎಂದು ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.