ಬೆಂಗಳೂರು, ಮೇ. 24: ಕೊರೊನಾ ಸೋಂಕಿನಿಂದ ಮೃತಪಟ್ಟವರ ಮೃತದೇಹ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ನಿಯಮ ಉಲ್ಲಂಘಿಸಿದರೆ ಲೈಸೆನ್ಸ್ ರದ್ದು ಮಾಡುವುದಾಗಿ ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಖಡಕ್ ವಾರ್ನಿಂಗ್ ಕೊಟ್ಟಿದೆ.
ರಾಜ್ಯದ ಹಲವು ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರು ಮೃತಪಟ್ಟಲ್ಲಿ ಆಸ್ಪತ್ರೆಯ ಹಾಗೂ ಚಿಕಿತ್ಸೆಯ ಬಾಕಿ ವೆಚ್ಚ ಪಾವತಿಸಿದ ನಂತರ ಶವವನ್ನು ಸಂಬಂಧಿಕರಿಗೆ ನೀಡುವಂತೆ ಷರತ್ತು ವಿಧಿಸುತ್ತಿರುವ ಹಲವು ಪ್ರಕರಣಗಳು ಕಂಡುಬಂದಿದ್ದು, ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
ಆದರೆ, ಕರ್ನಾಟಕ ಪ್ರೈವೆಟ್ ಮೆಡಿಕಲ್ ಎಸ್ಟಾಬ್ಲಿಷ್ಮೆಂಟ್ ಆ್ಯಕ್ಟ್(KPME) ಅಡಿಯಲ್ಲಿ ವ್ಯಕ್ತಿಯ ಮೃತದೇಹವನ್ನು ಆತನ ಸಂಬಂಧಿಕರಿಗೆ ಹಸ್ತಾಂತರ ಮಾಡುವಾಗ ಬಿಲ್ ಪಾವತಿಗೆ ಒತ್ತಾಯಿಸುವಂತಿಲ್ಲ ಅಥವಾ ಒತ್ತಡ ಹೇರುವಂತಿಲ್ಲ. ಜೊತೆಗೆ ಬಿಲ್ ಪಾವತಿ ಮಾಡದೆ ಇದ್ದಲ್ಲಿ ಮೃತದೇಹ ಹಸ್ತಾಂತರ ಮಾಡಲು ನಿರಾಹರಿಸುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಇಂತಹ ಪ್ರಕರಣಗಳು ವರದಿಯಾದಲ್ಲಿ ಕೆಪಿಎಂಇ ಕಾಯ್ದೆ ನಿಯಮದ ಅನ್ವಯ ಶವ ಹಸ್ತಾಂತರಕ್ಕೆ ಸತಾಯಿಸಿದರೆ, ನಿಯಮ ಉಲ್ಲಂಘಿಸಿದರೆ ಆಸ್ಪತ್ರೆ ಲೈಸೆನ್ಸ್ ರದ್ದು ಮಾಡುವುದಾಗಿ ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಆದೇಶ ನೀಡಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಕಾರ್ಯ ಪ್ರವೃತ್ತರಾಗಲು ಸೂಚಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದೆ.