ಬೆಂಗಳೂರು, ಏ. 16: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಪ್ರಮುಖ ಜಿಲ್ಲೆಗಳ ನ್ಯಾಯಾಲಯಗಳಿಗೆ ಕಕ್ಷಿದಾರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, 8 ಜಿಲ್ಲೆಗಳಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕೋವಿಡ್ ಹೆಚ್ಚಾಗಿರುವ 8 ಜಿಲ್ಲಾ ನ್ಯಾಯಾಲಯ ಮತ್ತು ವಿಚಾರಣಾ ನ್ಯಾಯಾಲಗಳಿಗೆ ಅನ್ವಯಿಸುವಂತೆ ತುರ್ತು ಸೂಚನಾ ಪ್ರಕಟಣೆಯನ್ನು ಕರ್ನಾಟಕ ಹೈಕೋರ್ಟ್ ಹೊರಡಿಸಿದೆ. ಸುಪ್ರೀಂ ಹಾಗೂ ಹೈಕೋರ್ಟ್ ನಿರ್ದೇಶನದ ಪ್ರಕರಣಗಳನ್ನು ಹೊರತುಪಡಿಸಿ ಎಲ್ಲಾ ಸಿವಿಲ್, ಕ್ರಿಮಿನಲ್ ಪ್ರಕರಣಗಳ ಸಾಕ್ಷ್ಯ ದಾಖಲೀಕರಣ ನಿರ್ಬಂಧಿಸಲಾಗಿದೆ.
ತುರ್ತು ಸೂಚನೆಯ ಅನ್ವಯ ಈ ಕೋರ್ಟ್ ಆವರಣಗಳಿಗೆ ಕಕ್ಷೀದಾರರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಬೀದರ್, ಕಲಬುರಗಿ, ದಕ್ಷಿಣ ಕನ್ನಡ, ತುಮಕೂರು, ಮೈಸೂರು, ಹಾಸನ ಜಿಲ್ಲೆಗಳ ಜಿಲ್ಲಾ ನ್ಯಾಯಾಲಯಗಳು ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ಈ ಸೂಚನೆಗಳು ಅನ್ವಯಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.