ನವದೆಹಲಿ ಸೆ 18 : ಟಿ-20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಟಿ20 ನಾಯಕತ್ವದಿಂದ ಹಿಂದೆ ಸರಿಯುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಹಾಗೆ ಟೀಂ ಇಂಡಿಯಾದಲ್ಲಿ ಇನ್ನೂ ಹಲವು ದೊಡ್ಡ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಟಿ-20 ವಿಶ್ವಕಪ್ ನಂತರ ರವಿಶಾಸ್ತ್ರಿಯವರ ಒಪ್ಪಂದದ ಅವಧಿ ಮುಗಿಯಲಿದ್ದು, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಭಾರತ ತಂಡ ಮುಂದಿನ ಕೋಚ್ ಯಾರಾಗಲಿದ್ದಾರೆಂಬ ಕುತೂಹಲವಿದ್ದು ಈ ಸ್ಥಾನಕ್ಕೆ ಕನ್ನಡಿಗ ಅನಿಲ್ ಕುಂಬ್ಳೆ ಆಯ್ಕೆಯಾಗುವ ಸಾಧ್ಯತೆಯಿದೆ.
ಅಕ್ಷೋಬರ್ನಲ್ಲಿ ನಡೆಯುವ ಟಿ-20 ವಿಶ್ವಕಪ್ ನಂತರ ಭಾರತ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ರವಿಶಾಸ್ತ್ರಿ ರಾಜೀನಾಮೆ ನೀಡಿದ ಬಳಿಕ ಅವರ ಸ್ಥಾನವನ್ನು ರಾಹುಲ್ ದ್ರಾವಿಡ್ ತುಂಬಲಿದ್ದಾರೆ ಎನ್ನಲಾಗಿತ್ತು ರಾಹುಲ್ ದ್ರಾವಿಡ್ ಅವರನ್ನು ಟೀಂ ಇಂಡಿಯಾದ ಮುಖ್ಯ ಹುದ್ದೆಗೆ ನೇಮಕ ಮಾಡಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಉತ್ಸುಕರಾಗಿದ್ದಾರೆಂಬ ಮಾತುಗಳು ಕ್ರಿಕೆಟ್ ವಲಯದಲ್ಲಿ ಕೇಳಿಬಂದಿದ್ದವು. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಸೌರವ್ ಗಂಗೂಲಿ ನೇತೃತ್ವದ ಬಿಸಿಸಿಐ, ವಿವಿಎಸ್ ಲಕ್ಷ್ಮಣ್ ಜೊತೆಗೆ ಭಾರತೀಯ ತಂಡದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವಂತೆ ಅನಿಲ್ ಕುಂಬ್ಲೆ ಅವರಿಗೂ ಆಹ್ವಾನ ನೀಡಲಿದ್ದಾರೆ ಎಂದು ಬಿಸಿಸಿಐ ಕೆಲವು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.