ಇಂದಿನಿಂದ ವಿಧಾನಮಂಡಲದ ಚಳಿಗಾಲದ ಅಧಿವೇಶನ

ಬೆಂಗಳೂರು, ಡಿ. 07: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಸೋಮವಾರ ಆರಂಭವಾಗಲಿದ್ದು, ಆಡಳಿತಾರೂಢ ಬಿಜೆಪಿ ವಿರುದ್ಧ ಹರಿಹಾಯಲು ಪ್ರತಿಪಕ್ಷಗಳು ಸಜ್ಜಾಗಿವೆ. ಗೋಹತ್ಯೆ ನಿಷೇಧ, ಲವ್ಜಿಹಾದ್, ಭೂ ಸುಧಾರಣೆ, ಎಪಿಎಂಸಿಯಂತಹ ವಿವಾದಿತ ಕಾಯ್ದೆಗಳ ಅಂಗೀಕಾರಕ್ಕೆ ವಿಧಾನಮಂಡಲದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಲು ಕಾಂಗ್ರೆಸ್ ನಿರ್ಧರಿಸಿದೆ.

ಸದನದಲ್ಲಿ ವಿಪಕ್ಷಗಳು ಸರ್ಕಾರದ ವೈಫಲ್ಯವನ್ನು ಮುಂದಿಟ್ಟುಕೊಂಡು ನಡೆಸುವ ವಾಗ್ದಾಳಿಗಳನ್ನು ಸಮರ್ಥವಾಗಿ ಎದುರಿಸಲು ಆಡಳಿತಾರೂಢ ಬಿಜೆಪಿ ತಂತ್ರರೂಪಿಸಿದೆ. ಪ್ರತಿಪಕ್ಷಗಳ ಅಸ್ತ್ರಗಳಿಗೆ ತನ್ನದೇ ಆದ ಪ್ರತ್ಯಾಸ್ತ್ರಗಳನ್ನು ಬತ್ತಳಿಕೆಯಲ್ಲಿ ಸಿದ್ದಮಾಡಿಕೊಂಡಿದೆ. ಹಾಗಾಗಿ ಈ ಅಧಿವೇಶನ ಆರೋಪ-ಪ್ರತ್ಯಾರೋಪ, ಮಾತಿನ ಚಕಮಕಿಗಳಿಗೆ ವೇದಿಕೆಯಾಗುವುದು ನಿಶ್ಚಿತ.
ಡಿಸೆಂಬರ್ ೭ರಂದು ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನ ಡಿಸೆಂಬರ್ ೧೫ರ ವರೆಗೆ ನಡೆಯಲಿದೆ. ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪಗಳು ಸೇರಿದಂತೆ ಎಲ್ಲ ರೀತಿುಂ ಕಲಾಪಗಳು ನಡೆಯಲಿವೆ. ಕೊನೆಯ ಎರಡು ದಿನ ಅಂದರೆ ಡಿ. ೧೪ ಮತ್ತು ೧೫ ರಂದು ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತ ಚರ್ಚೆ ನಡೆಸಲಾಗುತ್ತದೆ. ಕೋವಿಡ್ ಹಿನ್ನೆಲೆಯಲ್ಲಿ ಅಧಿವೇಶನದ ದಿನಗಳಲ್ಲಿ ಸಾಕಷ್ಟು ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಎರಡೂ ಸದನಗಳಲ್ಲಿ ರಾಜ್ಯ ಸರ್ಕಾರದ ಆಡಳಿತ ವೈಖರಿ ಹಾಗೂ ಇನ್ನಿತರ ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರಕ್ಕೆ ಮುಜುಗರ ಉಂಟು ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದನ್ನು ಹೇಗೆ ಪರಿಣಾಮಕಾರಿಯಾಗಿ ಎದುರಿಸಬೇಕು ಎಂಬ ನಿಟ್ಟಿನಲ್ಲಿ ಭಾನುವಾರ ಬಿಜೆಪಿಯ ಉನ್ನತ ನಾಯಕರು ಸಭೆ ಸೇರಿ ಚರ್ಚಿಸಿದ್ದಾರೆ.

ಅಧಿವೇಶನದ ಆರಂಭದಲ್ಲಿ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ವಿಷಯಗಳನ್ನು ಮುಂದಿಟ್ಟುಕೊಂಡು ಚರ್ಚಿಸುವ ಕಾರ್ಯತಂತ್ರ ಅನುಸರಿಸಬೇಕು, ವಿವಾದಿತ ಮಸೂದೆಗಳ ಮಂಡನೆಗೆ ಅವಕಾಶ ಸಿಗದಂತೆ ಎಚ್ಚರಿಕೆ ವಹಿಸಬೇಕು, ಒಂದು ವೇಳೆ ಮಂಡನೆಯಾದರೂ ಅವು ಅಂಗೀಕಾರಗೊಳ್ಳದಂತೆ ಕಾಲಕ್ಕೆ ತಕ್ಕಂತೆ ರಣತಂತ್ರಗಳನ್ನು ಪಾಲಿಸಬೇಕೆಂದು ಕಾಂಗ್ರೆಸ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಧಾನಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಭಾನುವಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಗೃಹ ಕಚೇರಿಯಲ್ಲಿ ನಡೆದ ಉಭಯ ಸದನಗಳ ನಾಯಕರು ಹಾಗೂ ಸದಸ್ಯರ ಸಭೆಯಲ್ಲಿ ರಾಜ್ಯ ಸರ್ಕಾರದ ನಡವಳಿಕೆಗಳ ಕುರಿತು ತೀವ್ರ ಆಕ್ರೋಶ ವ್ಯಕ್ತವಾಯಿತು.

ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ನ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್, ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಈಶ್ವರ್ಖಂಡ್ರೆ, ಸಲೀಂ ಅಹಮ್ಮದ್, ಹಿರಿಯ ನಾಯಕರಾದ ಎಚ್.ಕೆ.ಪಾಟೀಲ್, ರಮೇಶ್ಕುವಾರ್, ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್ ಸೇರಿದಂತೆ ಅನೇಕ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಬಿಜೆಪಿ ಸರ್ಕಾರ ಅಭಿವೃದ್ಧಿಗೆ ಪೂರಕವಾದ ಯಾವುದೇ ಕಾನೂನುಗಳನ್ನು ಜಾರಿಗೆ ತರುತ್ತಿಲ್ಲ. ಬದಲಾಗಿ ವೋಟ್ ಬ್ಯಾಂಕ್ ದೃಷ್ಟಿಯಿಂದ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಕಾನೂನುಗಳನ್ನು ರೂಪಿಸುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಕೊರೊನಾ ಹಾವಳಿಯಿದೆ. ನೆರೆಯಿಂದ ಉತ್ತರ ಕರ್ನಾಟಕ ಸೇರಿದಂತೆ ಬಹುತೇಕ ಜಿಲ್ಲೆಗಳು ಸಂತ್ರಸ್ತವಾಗಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.

Exit mobile version