Ramanagar: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ರಾಜಕೀಯ ಜಿದ್ದಾಜಿದ್ದು ರಂಗೇರಿದ್ದು, ತಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಮೂರು ಪಕ್ಷಗಳು ಸದಸ್ಯರ ಆಪರೇಷನ್ಗೆ ಕೈ ಹಾಕಿವೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಗೆಲ್ಲಲು ಪಣ ತೊಟ್ಟಿರುವ ಡಿಕೆ ಬ್ರದರ್ಸ್ ಚನ್ನಪಟ್ಟಣದಲ್ಲಿ ರಾತ್ರೋರಾತ್ರಿ ಭರ್ಜರಿ ಆಪರೇಷನ್ ಮೂಲಕ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಅವರಿಗೆ ಬಿಗ್ ಶಾಕ್ ಕೊಟ್ಟಿದ್ದು, 9 ಜೆಡಿಎಸ್ ಸದಸ್ಯರು ಜೆಡಿಎಸ್ (JDS) ತೊರೆದು, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಚನ್ನಪಟ್ಟಣದಲ್ಲಿ (Channapatna) ನಗರಸಭೆ ಅಧ್ಯಕ್ಷ ಸೇರಿದಂತೆ 9 ಮಂದಿ ಸದಸ್ಯರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ರಾತ್ರೋರಾತ್ರಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ನಗರಸಭೆಯ ಅಧ್ಯಕ್ಷ ಪ್ರಶಾಂತ್, ಸದಸ್ಯರಾದ ರೇವಣ್ಣ, ಶ್ರೀನಿವಾಸಮೂರ್ತಿ, ಲೋಕೇಶ್, ಸತೀಶ್ ಬಾಬು, ನಾಗೇಶ್, ಸೈಯದ್ ರಫೀಕ್, ಭಾನುಪ್ರಿಯಾ, ಅಭಿದಾಭಾನು, ಪಕ್ಷೇತರ ಸದಸ್ಯೆಯಾದ ಉಮಾ ಸೇರಿದಂತೆ ಒಟ್ಟು 9 ಮಂದಿ ಸದಸ್ಯರು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ.
ಇನ್ನು ಚನ್ನಪಟ್ಟಣ ನಗರಸಭೆಯ ಒಟ್ಟು ಜೆಡಿಎಸ್ ಸದಸ್ಯರ ಪೈಕಿ ಮೂರನೇ ಒಂದರಷ್ಟು ಸದಸ್ಯರು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಹೀಗಾಗಿ ನಮ್ಮನ್ನು ಕಾಂಗ್ರೆಸ್ ಸದಸ್ಯರೆಂದು ಪರಿಗಣಿಸಿ ಕಾಂಗ್ರೆಸ್ ಸದಸ್ಯರ ಜೊತೆ ಕೂರಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಇನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಈ ಬಾರಿ ಭಾರೀ ಜಿದ್ದಾಜಿದ್ದಿನಿಂದ ಕೂಡಿದ್ದು, ಹಾಲಿ ಸಂಸದ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಮತ್ತು ಖ್ಯಾತ ಹೃದ್ರೋಗ ತಜ್ಞ ಡಾ. ಮಂಜುನಾಥ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಈ ಕ್ಷೇತ್ರವನ್ನು ಗೆಲ್ಲಲು ಭಾರೀ ಕಸರತ್ತು ನಡೆಸಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಕರೆಸಿ ಶಕ್ತಿ ಪ್ರದರ್ಶನ ಮಾಡಿದೆ. ಇನ್ನೊಂದೆಡೆ ಡಿಕೆ ಬ್ರದರ್ಸ್ ಕೂಡಾ ಮತ್ತೊಮ್ಮೆ ಈ ಕ್ಷೇತ್ರವನ್ನು ಗೆಲ್ಲಲು ರಣತಂತ್ರ ರೂಪಿಸಿದ್ದಾರೆ.