- ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ನಿಗಮಗಳ (ksrtc bangalore chalo protest) ನೌಕರರಿಂದ ‘ಬೆಂಗಳೂರು ಚಲೋ’ ಕರೆ
- ಸರ್ಕಾರ ಸ್ಪಂದಿಸದಿದ್ದರೆ ಸಾಮೂಹಿಕ ರಾಜೀನಾಮೆ ಪ್ಲಾನ್
- 38 ತಿಂಗಳ ಬಾಕಿ ವೇತನ ಮತ್ತು ಹೊಸ ಒಪ್ಪಂದಕ್ಕೆ ಆಗ್ರಹಿಸಿ ನಾಳೆ ಮಹಾ ಚಲೋ
Bengaluru: ರಾಜ್ಯದ ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವೆ (ksrtc bangalore chalo protest) ಮುಂದುವರಿದಿರುವ ಸಂಘರ್ಷ ಮತ್ತೊಂದು ಹಂತ ತಲುಪಿದೆ.
ದೀರ್ಘಕಾಲದಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ, ಜನವರಿ 29ರಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳು ‘ಬೆಂಗಳೂರು ಚಲೋ’ಗೆ ಕರೆ ನೀಡಿವೆ. ನಾಳೆ ಸಂಜೆವರೆಗೆ ಸರ್ಕಾರದಿಂದ ಸ್ಪಷ್ಟ ಪ್ರತಿಕ್ರಿಯೆ ಸಿಗದಿದ್ದರೆ, ಸಾಮೂಹಿಕ ರಾಜೀನಾಮೆಗೆ ಮುಂದಾಗುವುದಾಗಿ ನೌಕರರ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ.
ಕೆಎಸ್ಆರ್ಟಿಸಿ (KSRTC) ಸೇರಿದಂತೆ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಈ ಹೋರಾಟದಲ್ಲಿ ಭಾಗಿಯಾಗುತ್ತಿದ್ದಾರೆ.

ವೇತನ ಪರಿಷ್ಕರಣೆ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷ್ಯ (ksrtc bangalore chalo protest) ಮಾಡುತ್ತಿದೆ ಎಂದು ಆರೋಪಿಸಿರುವ ನೌಕರರು, ತಮ್ಮ ಸಹನಶೀಲತೆ ಮಿತಿ ಮೀರಿದೆ ಎಂದು ಹೇಳಿದ್ದಾರೆ.
ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಸಂಘಟನೆಗಳು, ಈ ಹೋರಾಟವನ್ನು ಕೇವಲ ಪ್ರತಿಭಟನೆಯಾಗಿ ಅಲ್ಲ, ತಮ್ಮ ಹಕ್ಕುಗಳಿಗಾಗಿ ನಡೆಯುವ ಅಂತಿಮ ಹೋರಾಟವೆಂದು ಬಣ್ಣಿಸಿವೆ.
ನಾಳೆ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ತಾಲೂಕುಗಳಿಂದ ಸಾವಿರಾರು ಸಾರಿಗೆ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ (Freedom Park) ಜಮಾಯಿಸಲಿದ್ದಾರೆ.
ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಪ್ರತಿಭಟನೆ ನಡೆಯಲಿದೆ. ಈ ವೇಳೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಶಾಂತಿಯುತ ಆದರೆ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಲಾಗಿದೆ. ಪ್ರತಿಭಟನೆಯಲ್ಲಿ ನೌಕರರ ಕುಟುಂಬಸ್ಥರೂ ಭಾಗವಹಿಸುವ ಸಾಧ್ಯತೆ ಇದ್ದು, ಹೋರಾಟಕ್ಕೆ ಹೆಚ್ಚಿನ ಬಲ ಸಿಗಲಿದೆ ಎನ್ನಲಾಗಿದೆ.
ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳಲ್ಲಿ ಎರಡು ಅಂಶಗಳು ಪ್ರಮುಖವಾಗಿವೆ. ಮೊದಲನೆಯದಾಗಿ, 2020ರ ಜನವರಿ 1ರಿಂದ 2023ರ ಫೆಬ್ರವರಿ 28ರವರೆಗೆ ಬಾಕಿ ಉಳಿದಿರುವ 38 ತಿಂಗಳ ವೇತನ ಪರಿಷ್ಕರಣೆ ಹಿಂಭಾಕಿಯನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂಬುದು.
ಎರಡನೆಯದಾಗಿ, 2024ರಿಂದ ಮುಂದಿನ ನಾಲ್ಕು ವರ್ಷಗಳ ವೇತನ ಒಪ್ಪಂದವನ್ನು ಕೂಡಲೇ ಜಾರಿಗೊಳಿಸಬೇಕು ಎಂಬ ಆಗ್ರಹವಿದೆ. ಈ ಬೇಡಿಕೆಗಳು ಈಡೇರದಿದ್ದರೆ ಜನವರಿ 30ರಿಂದ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಜಂಟಿ ಕ್ರಿಯಾ ಸಮಿತಿ ಸ್ಪಷ್ಟಪಡಿಸಿದೆ.
ಇವೆಲ್ಲದರ ನಡುವೆ , ಮತ್ತೊಂದು ಸಾರಿಗೆ ಸಂಘಟನೆಯಾದ ಕೆಎಸ್ಆರ್ಟಿಸಿ ನೌಕರರ ಕೂಟವೂ ಹೋರಾಟಕ್ಕೆ ಬೆಂಬಲ ಘೋಷಿಸಿದ್ದು, ಶಿವರಾತ್ರಿ ನಂತರ ಫೆಬ್ರವರಿ 15ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಪ್ರಕಟಿಸಿದೆ.
ಇತ್ತ ಸಾರಿಗೆ ಇಲಾಖೆ ಕಠಿಣ ನಿಲುವು ತಾಳಿದ್ದು, ಯಾವುದೇ ರೀತಿಯ ಮುಷ್ಕರ ಅಥವಾ ಮುಷ್ಕರಕ್ಕೆ ಬೆಂಬಲ ನೀಡುವಂತಿಲ್ಲ ಎಂದು ಸೂಚಿಸಿದೆ. ಡ್ಯೂಟಿಗೆ ಹಾಜರಾಗದ ನೌಕರರಿಗೆ ‘ನೋ ವರ್ಕ್, ನೋ ಪೇ’ ನಿಯಮ ಅನ್ವಯವಾಗಲಿದೆ ಎಂದು ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷ ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ.
ಇದನ್ನು ಓದಿ : https://vijayatimes.com/hosanagara-bengaluru-sleeper-bus-fire/